ಬೆಂಗಳೂರು: ಆದಾಯಕ್ಕೂ ಮೀರಿ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಆಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯಾದ್ಯಂತ 30 ಕಡೆ ಎಸಿಬಿ ರೇಡ್ ನಡೆದಿದೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಕಲಬುರಗಿಯ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕ ಡಿ. ಪಾಂಡುರಂಗ ಗರಗ್ ಅವರಿಗೆ ಸಂಬಂಧಿಸಿದ ವಿಜಯನಗರದ ಮನೆ, ಜಯನಗರ, ಮಲ್ಲೇಶ್ವರಂ ಕಚೇರಿ ಹಾಗೂ ಚಿತ್ರದುರ್ಗದ ಮನೆ ಸೇರಿ ಐದು ಕಡೆ, ಹುಬ್ಬಳ್ಳಿಯ ಸಣ್ಣ ನೀರಾವರಿ ಇಲಾಖೆ ಇಇ ದೇವರಾಜ್ ಶಿಗ್ಗಾಂವಿ ಎಂಬವರ ಮನೆಗಳ ಮೇಲೆ, ಹುಬ್ಬಳ್ಳಿ ಗೋಕುಲ ರಸ್ತೆ, ವಿದ್ಯಾನಗರ, ಕೋಟಿಲಿಂಗೆಶ್ವರ ನಗರದ ಮನೆಗಳಲ್ಲಿ ಮೂರು ಎಸಿಬಿ ತಂಡಗಳು ಪರಿಶೀಲನೆ ನಡೆಸುತ್ತಿವೆ.
ಚಿತ್ರದುರ್ಗದಲ್ಲಿ ಧಾರವಾಡ ಅರಣ್ಯ ಇಲಾಖೆಯ ಅಧಿಕಾರಿ ಶ್ರೀನಿವಾಸ್ ಎಂಬವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಶ್ರೀನಿವಾಸ್ ಧಾರವಾಡ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾನಗರದ ಮನೆ ಹಾಗೂ ಬಸವೇಶ್ವರ ಮೆಡಿಕಲ್ ಕಾಲೇಜು ಬಳಿಯ ಮನೆ ಮೇಲೆ ದಾಳಿ ನಡೆಸಲಾಗಿದೆ. ಜೊತೆಗೆ ಚಿತ್ರದುರ್ಗ ತಾಲೂಕಿನ ಮಾರಘಟ್ಟ ಗ್ರಾಮದ ಬಳಿಯ ತೋಟದ ಮನೆ ಮೇಲೂ ದಾಳಿ ನಡೆಸಲಾಗಿದೆ.
ಕೋಲಾರದಲ್ಲಿ ಡಿಹೆಚ್ಓ ಡಾ. ವಿಜಯ್ ಕುಮಾರ್ ಅವರ ಮನೆ ಕಚೇರಿ ಸೇರಿ ಒಟ್ಟು 6 ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.
ಚಿಂತಾಮಣಿಯಲ್ಲಿರುವ ಮನೆ ಹಾಗೂ ಬೆಂಗಳೂರಿನ ಫ್ಲಾಟ್ ಸೇರಿ ಒಟ್ಟು ಆರು ಕಡೆ ಏಕಕಾಲದಲ್ಲಿ ಎಸಿಬಿ ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.