ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ರ್ಯಾಂಡಮ್ ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದ ಯುವಕನ ಜೊತೆ ಬಿಬಿಎಂಪಿ ಅಧಿಕಾರಿಗಳು ವಾಗ್ವಾದ ನಡೆಸಿದ್ದಾರೆ. ನಂತರ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಈಗ ಎಲ್ಲೆಡೆ ಹರಿದಾಡು ತ್ತಿದೆ.
ನಗರದ ನಾಗರಥ್ಪೇಟೆ ಬಳಿ ಯುವಕನ ಮೇಲೆ ಅಧಿಕಾರಿಗಳು ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ.
ಮೊದಲು ಬೆಂಗಳೂರು ಒಂದರಲ್ಲೇ ದಿನಕ್ಕೆ 89 ಸಾವಿರ ರ್ಯಾಪಿಡ್ ಆಂಟಿಜೆನ್ ಮತ್ತು ಆರ್ಟಿ-ಪಿಸಿಆರ್ ಕೋವಿಡ್ ಪರೀಕ್ಷೆಯನ್ನು ಮಾಡಲಾಗುತ್ತಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಪರೀಕ್ಷೆಯನ್ನು ಮಾಡಲಾಗುತ್ತಿತ್ತು. ಮೂರನೇ ವಾರದ ಹೊತ್ತಿಗೆ ಸುಮಾರು ನಲವತ್ತು ಸಾವಿರಕ್ಕೆ ಇಳಿದಿತ್ತು. ಹಾಗಾಗಿ, ಹೊಸ ಸೋಂಕಿತರ ಸಂಖ್ಯೆಯೂ ಇಳಿಕೆಯಾಗಿತ್ತು.
ರಾಜ್ಯದಲ್ಲಿ ಪ್ರಕರಣಗಳು ಕಡಿಮೆಯಾಗಿಲ್ಲ, ಟೆಸ್ಟಿಂಗ್ ಸಂಖ್ಯೆ ಕಮ್ಮಿಯಾಗಿದೆ ಎಂದು ವಿಪಕ್ಷಗಳು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು. ಹೀಗಾಗಿ, ಮತ್ತೆ ರ್ಯಾಂಡಮ್ ಟೆಸ್ಟಿಂಗ್ ಅನ್ನು ಹೆಚ್ಚಿಸಲು ಬಿಬಿಎಂಪಿ ನಿರ್ಧರಿಸಿದೆ. ಕಳೆದ ಶನಿವಾರದಿಂದ ಕಲಾಸಿಪಾಳ್ಯ, ಕೊಳೆಗೇರಿ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಬಿಬಿಎಂಪಿ ಆರಂಭಿಸಿದೆ.
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಮಿನಿ ಲಾಕ್ಡೌನ್ ಜಾರಿ ಮಾಡಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪ್ರಕರಣಗಳು ಇಳಿಕೆ ಯಾಗುತ್ತಿಲ್ಲ. ಬೆಂಗಳೂರು ನಗರದಲ್ಲಿ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಈಗಲೂ ದಿನಕ್ಕೆ ಸನಿಹ ೧೦ ಸಾವಿರ ಪ್ರಕರಣಗಳು ವರದಿಯಾಗುತ್ತಿವೆ.