ಬೆಂಗಳೂರು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಮಠ, ಮಂದಿರ, ಮಸೀದಿ, ಚರ್ಚ್ ಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ಏಕಾಏಕಿ ಮಾರ್ಗಸೂಚಿ ಬದಲಿಸಿರುವ ಸರ್ಕಾರದ ನಿರ್ಧಾರದಿಂದ ಬೆಚ್ಚಿಬಿದ್ದಿರುವ ವ್ಯಾಪಾರಸ್ಥರು ಪೊಲೀಸರ ಜೊತೆ ವಾಗ್ವಾದ ಕ್ಕಿಳಿದಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.