ಬೆಂಗಳೂರು: ಉಪ ಚುನಾವಣೆ ನಡೆದಿರುವ ಆರ್ ಆರ್ ನಗರದಲ್ಲಿ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಮಾಡಿದ್ದಾರೆ.
ನ.10 ರಂದು ಆರ್ ಆರ್ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹೀಗಾಗಿ ನವೆಂಬರ್ 10ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದಾರೆ.
ಆರ್ ಆರ್ ನಗರದ ಹಲಗೇವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಗೆದ್ದ ಅಥವಾ ಸೋತ ವ್ಯಕ್ತಿಗಳ ಪರ-ವಿರೋಧವಾಗಿ ಮೆರವಣಿಗೆ ಅಥವಾ ಪ್ರತಿಭಟನೆ ಮಾಡುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ರಾಜಕೀಯ ಮೆರವಣಿಗೆಗಳನ್ನು ನಡೆಸುವಂತಿಲ್ಲ, ಘೋಷಣೆ ಹಾಕುವಂತಿಲ್ಲ ಎಂದು ಸೂಚಿಸಲಾಗಿದೆ.