ಕಲಬುರಗಿ: ಜಿಲ್ಲೆಯ ಭೀಮಾನದಿಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ತೊಂದರೆಗೊಳಗಾಗುವ ಗ್ರಾಮಗಳಿಗೆ ಜಿಲ್ಲಾಡಳಿತ ಅಧಿಕಾರಿಗಳನ್ನು ನಿಯೋಜಿಸಿ, ಸ್ಥಳಕ್ಕೆ ಕಳುಹಿಸಿದೆ.
ಪ್ರವಾಹ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳಾದ ವಿ.ವಿ. ಜೋತ್ಸ್ನಾ ಅವರು, ಆಯಾ ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಮುಂತಾ ದವರ ಮೂಲಕ ಗ್ರಾಮಗಳ ಜನರ ತುರ್ತು ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರವಾಹಕ್ಕಿಡಾಗುವ ಸಂಭವವಿರುವ ಜೇವರ್ಗಿ, ಚಿತ್ತಾಪುರ, ಅಫಜಲಪುರ,ಕಲಬುರಗಿ, ಶಹಬಾದ್ ಹಾಗೂ ಕಾಳಗಿ ತಾಲೂಕುಗಳಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ತಾಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಆಯಾ ತಾಲ್ಲೂಕಿನ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಳೆದ ವರ್ಷದ ನೆರೆ ಹಾವಳಿ ಹಾಗೂ ನಕ್ಷೆಯನ್ನು ಪರಿಶೀಲಿಸಿ 150 ಹಳ್ಳಿಗಳ ಗ್ರಾಮದ ಜನರ ಸ್ಥಳಾಂತರಕ್ಕೆ ಸೂಚಿಸಲಾಗಿದ್ದರೂ, ಸ್ಥಳಕ್ಕೆ ತೆರಳಲಿರುವ ಅಧಿಕಾರಿಗಳು ಅಲ್ಲಿಯ ಪರಿಸ್ಥಿತಿ ಅವಲೋಕಿಸಿ ಕ್ರಮಕೈಗೊಳ್ಳಲಿದ್ದಾರೆ. ಒಟ್ಟು 27 ಅಧಿಕಾರಿಗಳನ್ನು ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ನಿಯೋಜಿಸಿದ್ದು,ಈಗಾಗಲೇ ಎಲ್ಲಾ ಅಧಿಕಾರಿಗಳನ್ನು ಆಯಾ ಗ್ರಾಮಗಳಿಗೆ ಕಳುಹಿಸಲಾಗಿದೆ ಎಂದು ಅವರು ವಿವರಿಸಿದರು.
ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು 4 ರಿಂದ 6 ಹಳ್ಳಿಗಳ ಉಸ್ತುವಾರಿ ನೋಡಿಕೊಳ್ಳಲಿದ್ದು, ಕಾಳಜಿ ಕೇಂದ್ರ, ರಕ್ಷಣಾ ಕಾರ್ಯ ಮುಂತಾದವುಗಳ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದರು. ಸ್ಥಳ ತಲುಪಿದ ಕೂಡಲೇ ಅಧಿಕಾರಿಗಳು ವಾಟ್ಸಪ್ ಮೂಲಕ ಲೊಕೇಶನ್ ಹಂಚಿಕೊಳ್ಳಬೇಕು ಎಂಬುದನ್ನು ಕಟ್ಟುನಿಟ್ಟಾಗಿ ಸೂಚಿಸಿರುವುದದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ವಿವಿಧ ಜಿಲ್ಲೆಗಳಿಂದ ರಕ್ಷಣಾ ತಂಡ : ಪ್ರವಾಹ ಪರಿಸ್ಥಿತಿ ನಿಭಾಯಿಸಲು ಉಡುಪಿ,ಬಳ್ಳಾರಿ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಬೋಟ್ ಗಳು ಹಾಗೂ ರಕ್ಷಣ ತಂಡಗಳ ವ್ಯವಸ್ಥೆ ಮಾಡಲಾಗುತ್ತಿದೆ. ದಾವಣಗೆರೆಯಿಂದ ಹಾಗೂ ಮಂಗ ಳೂರಿನಿಂದ ಎಸ್ ಡಿ ಆರ್ ಎಫ್ ತಂಡ ಬರಲಿವೆ.
ಅಗ್ನಿಶಾಮಕ ವಾಹನ: ಈಗಾಗಲೇ ಜಿಲ್ಲೆಯ 8 ಕಡೆ ಅಗ್ನಿಶಾಮಕ ಇಲಾಖೆಯ ಜಲವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜಿ ಸಲಾಗಿದೆ. ಅಫಜಲಪುರ ತಾಲ್ಲೂಕಿನ ಘತ್ತರಗಾ, ದೇವಲಗಾಣಗಪೂರ, ಜೇವರ್ಗಿಯ ನೆಲೋಗಿ, ಕಟ್ಟಿ ಸಂಗಾವಿ, ಕಲಬುರಗಿ ತಾಲ್ಲೂಕಿನ ಹಾಗರಗುಂಡಗಿ, ಚಿತ್ತಾಪುರದ ಕಡಬೂರ, ಸೇಡಂ ತಾಲ್ಲೂಕಿನ ಮಳಖೇಡ ಹಾಗೂ ಶಹಾಬಾದ್ ಗಳಲ್ಲಿ ಅಗ್ನಿಶಾಮಕ ವಾಹನ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ಎನ್ ಡಿ ಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಮಗ್ನವಾಗಿದ್ದು,ಅಗತ್ಯ ವಿದ್ದಲ್ಲಿ ಇನ್ನೂ ಎರಡು ತಂಡಗಳನ್ನು ಕರೆಸಿಕೊಳ್ಳಲಾಗುವುದು ಎಂದರು. ಇನ್ನು ಬೀದರ್ ವಾಯುನೆಲೆಯಲ್ಲಿ ಕಲಬುರಗಿ ಜಿಲ್ಲೆಯ ನೆರೆ ಸಂತ್ರಸ್ತರ ರಕ್ಷಿಸಲೆಂದೇ 2 ಹೆಲಿಕಾಪ್ಟರ್ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಡಲಾಗಿದೆ. ಅಗತ್ಯವಿದ್ದಾಗ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.