ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಮ ಉಲ್ಲಂಘಿಸಿ ಒನ್ ವೇನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ಒನ್ ವೇನಲ್ಲಿ ವಾಹನ ಚಲಾಯಿಸುತ್ತಿರುವ ವಿಡಿಯೋ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಪೊಲೀಸ್ ಅಧಿಕಾರಿಗಳು, ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.
ಮಾಹಿತಿಯ ಪ್ರಕಾರ, ರೋಹಿತ್ ಎಂಬಾತ ಚಲಾಯಿಸುತ್ತಿದ್ದ ಕಾರು ಸುಮಾರು 95 ಕಿ.ಮೀ. ವೇಗದಲ್ಲಿ ಇತ್ತು ಎಂದು ತಿಳಿದುಬಂದಿದೆ.
ಚಾಲಕ ರೋಹಿತ್ ಬ್ರೇಕ್ಗಳನ್ನು ಹೊಡೆದು ಐದು ಸೆಕೆಂಡುಗಳಲ್ಲಿ ಕಾರಿನ ವೇಗವನ್ನು ನಿಯಂತ್ರಿಸಿದ್ದು, ಅವರ ಮುಂದೆ ನೇರವಾಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕೆಂಪು ಬಣ್ಣದ SUV ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದನು ಎಂದು ತಿಳಿದುಬಂದಿದೆ.
ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಪೋಸ್ಟ್ಗೆ ಪ್ರತಿಕ್ರಿಯಿಸಿ ಕಠಿಣ ಕ್ರಮದ ಭರವಸೆ ನೀಡಿದರು. ಪೊಲೀಸರು ಅಡ್ಡದಿಡ್ಡಿಯಾಗಿ ಕಾರು ಚಲಾಯಿಸಿದವನನ್ನು ಗುರುತಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ, ಚಾಲಕನನ್ನು ಇನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ಧಾರೆ.
“ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಶಿಫಾರಸು ಮಾಡಲು ನಾವು ಪ್ರಾದೇಶಿಕ ಸಾರಿಗೆ ಕಚೇರಿಗೆ ಪತ್ರ ಬರೆದಿದ್ದೇವೆ. ನಮ್ಮ ಗಮನಕ್ಕೆ ಬಂದ ಎಲ್ಲಾ ಘಟನೆಗಳಲ್ಲಿಯೂ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ,” ಎಂದು ಹೇಳಿದರು.