Saturday, 26th October 2024

ಭಾರತೀಯ ಸಂವಿಧಾನದ ಉದ್ದೇಶಿತ ಜೀವನ ಎಲ್ಲರಿಗೂ ದಕ್ಕಲಿ: ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

ಚಿಕ್ಕಬಳ್ಳಾಪುರ : ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋಷವಾಗಿ ಬಾಳುವಂತೆ ಮಾಡುವುದೇ ಭಾರತೀಯ ಸಂವಿಧಾನದ ಪ್ರಧಾನ ಆಶಯವಾಗಿದೆ ಎಂದು ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದು ಕೊರತೆ ದೂರುಗಳ ವಿಚಾರಣೆ ನಡೆಸುವ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಬದುಕಬೇಕಾದರೆ ಒಬ್ಬರು ಮತ್ತೊಬ್ಬರ ಹಕ್ಕುಗಳನ್ನು ಪರಸ್ಪರ ಗೌರವಿಸಬೇಕು. ಸಂವಿಧಾನದಲ್ಲಿ ನೀಡಿರುವ ಕರ್ತವ್ಯಗಳನ್ನು ಪಾಲಿಸಿದರೆ ಸರ್ವರಿಗೂ ಉತ್ತಮ ಬದುಕು ಸಾಧ್ಯ. ಈ ಹಕ್ಕುಗಳಿಗೆ ದಕ್ಕೆಯಾದಾಗ, ಕಾರ್ಯಾಂಗ ಯೋಜನೆಗಳನ್ನು ಅನುಷ್ಟಾನಗೊಳಿಸಲು ವಿಫಲವಾದರೆ ಹಾಗೂ ಶಾಸಕಾಂಗ ತಪ್ಪು ಮಾಡಿದಾಗ ಆಗಿರುವ ಲೋಪಗಳನ್ನು ಸರಿಪಡಿಸಲು ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.

ಈ ಸಂಸ್ಥೆಯ ಫಲಶೃತಿಯನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ರಿಂದ ಅಹವಾಲು, ದೂರು ಅರ್ಜಿಗಳನ್ನು ಸ್ವೀಕರಿಸುವ ಜೊತೆಗೆ ಜಾಗೃತಿಯುಂಟು ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಈ ಸಂಸ್ಥೆಯನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕೆಂದು ಮನವಿ ಮಾಡಿದರು.

ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರವು ರೂಪಿಸಿದ ಯೋಜನೆಗಳು ಹಾಗೂ ಇತರೆ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸುವ ಕಾರ್ಯವನ್ನು ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ. ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ, ನಿಗ್ರಹ ಮಾಡುವುದು ಲೋಕಾಯುಕ್ತ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

ಗ್ರಾಮೀಣ ಭಾಗದ ಜನರಿಗೆ ಲೋಕಾಯುಕ್ತ ಸಂಸ್ಥೆಯು ಇದೆ ಎಂಬ ಅರಿವಿಲ್ಲ. ಹೇಗೆ ದೂರು ಸಲ್ಲಿಸಬೇಕು? ನಂತರ ಪ್ರಕ್ರಿಯೆ ಏನು ಎಂಬುದು ತಿಳಿದಿಲ್ಲ. ಈ ಕುರಿತು ಗ್ರಾಮೀಣ ಭಾಗದಲ್ಲಿ ಲೋಕಾಯುಕ್ತ ಸಂಸ್ಥೆಯ ಮಹತ್ವನ್ನು ಅರಿವು ಮೂಡಿಸಬೇಕು ಎಂದು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಹಿಂದೆ ಅಸ್ವಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ನಡೆಯುತ್ತಿದ್ದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ವರ್ಗಾವಣೆಯಾದ ಮೇಲೆ ನಮ್ಮ ಸಂಸ್ಥೆಯ ಕಾರ್ಯ ವ್ಯಾಪ್ತಿಯಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿಚಾರಣೆ ಮತ್ತು ತನಿಖೆಯನ್ನು ಪರಿಣಾಮ ಕಾರಿಯಾಗಿ ನಡೆಸಲು ತಾಂತ್ರಿಕ ವರ್ಗ ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗವನ್ನು ಸಂಸ್ಥೆಯಿ0ದಲೇ ಪ್ರತ್ಯೇಕವಾಗಿ ನೇಮಕ ಮಾಡಿಕೊಳ್ಳುವ ಆಲೋಚನೆ ಇದೆ ಎಂದರು.

ಮಾಧ್ಯಮ ಪಾತ್ರ ಮಹತ್ವದ್ದು: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯನಡೆಗಳ ಬಗ್ಗೆ ಸರ್ಕಾರದ ನಾಲ್ಕನೇ ಅಂಗವಾದ ಮಾಧ್ಯಮ ರಂಗವು ನಿರಂತರ ನಿಗಾವಹಿಸುತ್ತಿದೆ. ಯಾವುದೇ ಅಂಗಗಳಲ್ಲಿನ ಲೋಪದೋಷಗಳನ್ನು ಪ್ರಜೆಗಳ ಮುಂದಿಟ್ಟು ಸರಿಪಡಿಸುವಂತಹ ಮಹತ್ವದ ಜವಬ್ದಾರಿಯನ್ನು ಮಾಧ್ಯಮ ಕ್ಷೇತ್ರ ನಿರ್ವಹಿಸುವುದರಿಂದ ಈ ಕ್ಷೇತ್ರದ ಪಾತ್ರ ಮಹತ್ವದ್ದು, ಆದ್ದರಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯ ವಿಧಾನವನ್ನು ಹಳ್ಳಿ ಹಳ್ಳಿಯ ಕಟ್ಟ ಕಡೆಯ ವ್ಯಕ್ತಿಗೂ ತಾವೆಲ್ಲರೂ ತಲುಪಿಸಲು ಸಂಸ್ಥೆಯೊAದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ನಮ್ಮ ಸಂಸ್ಥೆಗೆ ನೇಮಕವಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಯಡಿ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಜಿಲ್ಲಾ ಮಟ್ಟ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುತ್ತಿದೆ. ಸಂಸ್ಥೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು, ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಪ್ರಸ್ತುತ ಸರ್ಕಾರ ಒದಗಿಸುತ್ತಿದೆ.

ಒಟ್ಟಾರೆಯಾಗಿ ಸಂಸ್ಥೆಯನ್ನು ಇನ್ನಷ್ಟು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆತ್ಮ ವಿಶ್ವಾಸ ವೃದ್ಧಿ: ಲೋಕಾಯುಕ್ತಕ್ಕೆ ಸಾರ್ವಜನಿಕರು ಲಿಖಿತ ಅರ್ಜಿ ಸಲ್ಲಿಸುವ ವಿಧಾನ, ದಾಖಲೆ ಸಹಿತ ಅರ್ಜಿ ಸಲ್ಲಿಕೆ ಹಾಗೂ ಯಾವ ರೀತಿಯ ಅರ್ಜಿಗಳನ್ನು ಹಾಕಬಹುದು, ಈ ಎಲ್ಲ ವಿಚಾರಗಳ ಬಗ್ಗೆ ವಿಸ್ಕೃತವಾಗಿ ಸಾರ್ವಜನಿಕರಿಗೆ ತಿಳಿಸಿಕೊಟ್ಟ ನಂತರ ಅಹವಾಲು ಮತ್ತು ದೂರು ಅರ್ಜಿಗಳನ್ನು ಖುದ್ದು ಸ್ವೀಕರಿಸಿದ್ದಲ್ಲದೆ ಕೆಲವು ದೂರು ಅರ್ಜಿಗಳ ಬಗ್ಗೆ ಸ್ಥಳದಲ್ಲೇ ತೀರ್ಮಾನ ಕೈಗೊಂಡು ವಿಲೇವಾರಿ ಮಾಡಿದರು.

ಮತ್ತಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಮಯ ನಿಗದಿ ಮಾಡಿ ತ್ವರಿತವಾಗಿ ಪರಿಹರಿಸಲು ಆದೇಶಿಸಿ ದರು. ಮಧ್ಯಾಹ್ನದ ವೇಳೆಗೆ ಒಟ್ಟು ೭೦ ಅರ್ಜಿಗಳನ್ನು ವಿಚಾರಣೆ ನಡೆಸಿ ವಿಲೇವಾರಿ ಮಾಡುವ ಪ್ರಯತ್ನ ನಡೆಸಿದರು.

ಕೆಲವೊಂದು ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿಲೇವಾರಿ ಮಾಡಿತು. ಬಹಳಷ್ಟು ದೂರುಗಳು ಕಂದಾಯ ಇಲಾಖೆಗೆ ಸಂಬ0ಧಿಸಿದ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬ0ಧಿಸಿದವು ಲೋಕಾಯುಕ್ತರ ಮುಂದೆ ಬಂದವು.

ಪ್ರಮುಖವಾಗಿ ಜಿಲ್ಲಾ ಕೇಂದ್ರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿ ಪ್ರಕರಣವು ಲೋಕಾಯುಕ್ತರ ಗಮನ ಸೆಳೆಯಿತು. ಉಪಲೋಕಾಯುಕ್ತರು ಅರ್ಜಿ ವಿಲೇವಾರಿ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಿದರು ಇವರ ನಡೆ ಸಾರ್ವಜನಿಕ ರಲ್ಲಿ ಹಾಗೂ ಅರ್ಜಿದಾರರಲ್ಲಿ ಆತ್ಮವಿಶ್ವಾಸ ಮೂಡಿಸಿತು.

ಸಭೆಯಲ್ಲಿ ಭಾರತ ಸಂವಿಧಾನ, ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಕಾರ್ಯ ಪ್ರಕ್ರಿಯೆಗಳನ್ನು ಇದೇ ವೇಳೆ ಮನಮುಟ್ಟುವಂತೆ ಸಾರ್ವಜನಿಕರಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕ ಅಮ್ಮನಬಾವಿ, ಉಪನಿಬಂಧಕ ಚನ್ನಕೇಶವರೆಡ್ಡಿ, ಸಹಾಯಕ ನಿಬಂಧಕ ಸಿ.ಚಂದ್ರಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್, ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಆಧೀಕ್ಷಕ ಪವನ್ ನೆಜ್ಜೂರ್, ಉಪವಿಭಾ ಗಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.