Thursday, 19th September 2024

ವಿಶ್ವಾಸ ಮತ ಗೆದ್ದ ಭೂಪೇಶ್ ಬಘೇಲ್

ರಾಯಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ವಿಧಾನಸಭೆ ಯಲ್ಲಿ ವಿಶ್ವಾಸ ಮತ ಗೆದ್ದಿದ್ದಾರೆ.

ವಿಧಾನಸಭೆ ಮುಂಗಾರು ಅಧಿವೇಶನದ ಕೊನೆಯ ದಿನದಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿತು. 13 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಶುಕ್ರವಾರ ತಡರಾತ್ರಿ 1 ಗಂಟೆಗೆ ಧ್ವನಿ ಮತದ ಮೂಲಕ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತವನ್ನು ಗೆದ್ದಿದೆ.

90 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 71 ಮತ್ತು ಬಿಜೆಪಿ 13 ಶಾಸಕರ ಬಲವಿದೆ.

ಶುಕ್ರವಾರ ಮಧ್ಯಾಹ್ನ ಆರಂಭವಾದ ಕಲಾಪದಲ್ಲಿ ಬಿಜೆಪಿ, ಸಿಎಂ ಬಘೇಲ್ ಸರ್ಕಾರದ ವಿರುದ್ಧ 109 ಅಂಶಗಳ ಚಾರ್ಜ್‌ಶೀಟ್ ಪ್ರಸ್ತುತಪಡಿಸಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿತ್ತು.

ಆದರೆ ರಾಜ್ಯ ಸರ್ಕಾರದ ಸಾಧನೆಯನ್ನು ಎತ್ತಿ ಹಿಡಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಬಿಜೆಪಿ ಮಾಡಿದ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಿದರು.