Friday, 20th September 2024

MLA Munirathna: ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ-ಛಲವಾದಿ ಸಂಘ ಒತ್ತಾಯ

ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಮ್ ನಾಯುಡು ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಜಯರಾಮಯ್ಯ ಮಾತನಾಡಿ ದಲಿತರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿರುವ ಶಾಸಕ ಮುನಿರತ್ನಂನಾಯ್ಡು ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ವಜಾ ಗೊಳಿಸಿ ಕಾನೂನು ರೀತಿ ಕ್ರಮ ಜರುಗಿಸಬೇಕು. ಜಾತಿ ನಿಂದನೆ ಪ್ರಕರಣ ದಾಖಲು ಮಾಡಿದರೆ ಸಾಲದು ಸೂಕ್ತ ಕಾನೂನು ಕ್ರಮ ಜರುಗಿಸಿ ನೊಂದ ಸಮುದಾಯದ ಮನಸ್ಸುಗಳಿಗೆ ನ್ಯಾಯ ದೊರಕಿಸಿ ಕೊಡಬೇಕು. ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದೆಂದು ಸರ್ಕಾರವನ್ನು ಅಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಆಶಾ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ಅಧ್ಯಕ್ಷರಾದ ನಾರಾಯಣಸ್ವಾಮಿ, ನಾಗೇಶ್, ಉಮೇಶ್ ಹಾಗೂ ನೂರಾರು ಸಂಖ್ಯೆಯಲ್ಲಿ ಛಲವಾದಿ ಸಮುದಾಯದವರು ಪಾಲ್ಗೊಂಡಿದ್ದರು.