Friday, 20th September 2024

Tirupati Laddoo: ತಿರುಪತಿ ಲಡ್ಡು ಪ್ರಸಾದ ವಿವಾದ; ವರದಿ ಕೇಳಿದ ಕೇಂದ್ರ ಸರ್ಕಾರ

tiruapati laddoo

ನವದೆಹಲಿ: ತಿರುಪತಿ ದೇವಾಲಯದಲ್ಲಿ ವಿತರಿಸುವ ಲಡ್ಡು ಪ್ರಸಾದ(Tirupati Laddoo)ದಲ್ಲಿ ಬೀಫ್‌ ಸೇರಿದಂತೆ ಹಲವು ಪ್ರಾಣಿಗಳ ಕೊಬ್ಬು ಬಳಸಿರುವ ವಿಚಾರ ದೇಶವ್ಯಾಪಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈ ಬಗ್ಗೆ ಸವಿಸ್ತಾರವಾದ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಆಂ‍ಧ್ರ ಪ್ರದೇಶ(Andra Pradesh) ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ವರದಿ ಕೇಳಿದ್ದು, ತಿರುಪತಿ ದೇವಸ್ಥಾನದಲ್ಲಿ ಲಡ್ಡು (ಸಿಹಿ) ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸ ಟ್ಯಾಲೋ, ಹಂದಿಯ ಕೊಬ್ಬ) ಮತ್ತು ಮೀನಿನ ಎಣ್ಣೆಯ ತೆಲುಗು ದೇಶಂ ಪಕ್ಷದ ಆರೋಪಗಳ ಬಗ್ಗೆ ಸಂಪೂರ್ಣ ವರದಿಗಾಗಿ ಸರ್ಕಾರ ಕಾಯುತ್ತಿದೆ. ಶೀಘ್ರವೇ ಈ ಬಗ್ಗೆ ವರದಿ ಸಲ್ಲಿಸುವಂತೆ ಆಂಧ್ರ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ಈ ಬಗ್ಗೆ ಮಾಹಿತಿ ಪಡೆದ ನಂತರ ನಾನು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅವರಿಂದ ವಿವರಗಳನ್ನು ಪಡೆದುಕೊಂಡಿದ್ದೇನೆ. ಲಭ್ಯವಿರುವ ವರದಿಯನ್ನು ಹಂಚಿಕೊಳ್ಳಲು ನಾನು ಅವರನ್ನು ಕೇಳಿದ್ದೇನೆ ಇದರಿಂದ ನಾನು ಅದನ್ನು ಪರಿಶೀಲಿಸಬಹುದು. ನಾನು ಪಕ್ಷದ ರಾಜ್ಯ ಮುಖಂಡರೊಂದಿಗೆ ಮಾತನಾಡಿ ಮಾಹಿತಿ ಪಡೆಯುತ್ತಿದ್ದೇನೆ. ಈ ಬಗ್ಗೆ ತನಿಖೆ ನಡೆಸುತ್ತೇನೆ. ಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ನಾನು ವರದಿಯನ್ನು ಕೇಳಿದ್ದೇನೆ ಮತ್ತು ನಾವು ಅದನ್ನು ಪರಿಶೀಲಿಸುತ್ತೇವೆ ಎಂದು ನಡ್ಡಾ ಶುಕ್ರವಾರ ಹೇಳಿದರು.

ಏನಿದು ಪ್ರಕರಣ?

ಕೋಟ್ಯಂತರ ಭಕ್ತರು ಭೇಟಿ ನೀಡುವ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು (Beef Fat) ಮತ್ತು ಮೀನಿನ ಎಣ್ಣೆ (Fish Fat) ಬೆರೆಸಲಾಗಿದೆ ಎಂಬ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು.

ವೈಎಸ್‌ಆರ್‌ಪಿ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂದು ಗುಜರಾತ್‌ನ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಿಂದ ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ತುಪ್ಪದಲ್ಲಿ ಮೀನಿನ ಎಣ್ಣೆ, ದನದ ಮಾಂಸ ಟಾಲೋ ಮತ್ತು ಹಂದಿಮಾಂಸದ ಕುರುಹುಗಳಿವೆ ಎಂದು ವರದಿ ಸೂಚಿಸಿದೆ.

ಕರ್ನಾಟಕ ಹಾಲು ಒಕ್ಕೂಟ (KMF) ಈ ವಿವಾದಕ್ಕೆ ಸಂಬಂಧಪಟ್ಟಂತೆ ಗುರುವಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಕೆಎಂಎಫ್, ‘ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಮಂಡಳಿಯು ಕಳೆದ ನಾಲ್ಕು ವರ್ಷಗಳಿಂದ ತಮ್ಮಿಂದ (ಕೆಎಂಎಫ್‌) ತುಪ್ಪವನ್ನು ಖರೀದಿಸಿಲ್ಲ’ ಎಂದು ಸ್ಪಷ್ಟನೆ ನೀಡಿದೆ. ಚಂದ್ರಬಾಬು ನಾಯ್ಡು ಆರೋಪಕ್ಕೆ ಸಂಬಂಧಿಸಿದಂತೆ ವರದಿಯನ್ನು ಟಿಡಿಪಿ (TDP) ಬಹಿರಂಗಪಡಿಸಿದೆ.

ಈ ಸುದ್ದಿಯನ್ನೂ ಓದಿ: Tirupati Laddoo: ತಿರುಪತಿ ಲಡ್ಡುವಿನಲ್ಲಿ ಬೀಫ್‌ ಕೊಬ್ಬು ಬಳಕೆ ಆರೋಪ- ಹೈಕೋರ್ಟ್‌ ಮೆಟ್ಟಿಲೇರಿದ YSRCP