Wednesday, 23rd October 2024

Sanjiv Khanna: ಸುಪ್ರೀಂ ಕೋರ್ಟ್‌ ಮುಂದಿನ ಸಿಜೆಐ ನ್ಯಾ. ಸಂಜೀವ್ ಖನ್ನಾ ಹಿನ್ನೆಲೆ ಏನು?

Sanjiv Khanna

ಭಾರತದ ಸುಪ್ರೀಂ ಕೋರ್ಟ್‌ನ (Indian Supreme Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಮುಂದಿನ ಏಳು ತಿಂಗಳ ಅವಧಿಗೆ 64 ವರ್ಷದ ಸಂಜೀವ್ ಖನ್ನಾ (Sanjiv Khanna) ಅವರು 2024ರ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಿರಿತನದ ನಿಯಮದ (seniority rule) ಆಧಾರದಲ್ಲಿ ಇವರಿಗೆ ಈ ಅಧಿಕಾರ ಪ್ರಾಪ್ತಿಯಾಗಲಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿರುವ ಡಿ.ವೈ. ಚಂದ್ರಚೂಡ್ (CJI DY Chandrachud) ಅವರು ನವೆಂಬರ್ 10ರಂದು ನಿವೃತ್ತರಾಗಲಿದ್ದು, ಇವರ ಸ್ಥಾನಕ್ಕೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನೇಮಕಗೊಳ್ಳಲಿದ್ದಾರೆ. ಭಾರತ ಸಂವಿಧಾನದ ಪ್ರಕಾರ ಮುಖ್ಯ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗಲಿರುವುದರಿಂದ ಹೊಸ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು 2025ರ ಮೇ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಸಂಜೀವ್ ಖನ್ನಾ ಅವರಿಗಿಂತ ಅನೇಕ ಹಿರಿಯರು, ಅನುಭವಿಗಳಿದ್ದರೂ ಅವರನ್ನು 2019ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿರುವುದು ಅನೇಕ ವಿವಾದಗಳಿಗೆ ಕಾರಣವಾಗಿತ್ತು.

ಇವರ ಶಿಕ್ಷಣದ ಹಿನ್ನೆಲೆ

1960ರ ಮೇ 14ರಂದು ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್ ಖನ್ನಾ ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದರು.

Sanjiv Khanna

ಜಿಲ್ಲಾ ನ್ಯಾಯಾಲಯದಿಂದ ಸುಪ್ರೀಂ ಕೋರ್ಟ್‌ವರೆಗೆ

ಸಂಜೀವ್ ಖನ್ನಾ ಅವರು 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ಸೇರಿಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಬಳಿಕ ದೆಹಲಿಯ ತೀಸ್ ಹಜಾರಿಯಲ್ಲಿರುವ ಜಿಲ್ಲಾ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಿದರು. ಅನಂತರ ದೆಹಲಿ ಹೈಕೋರ್ಟ್‌ ಸೇರಿದರು.

ಸಾಂವಿಧಾನಿಕ ಕಾನೂನು, ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ವಿಷಯಗಳಲ್ಲಿ ಪರಿಣತಿ ಪಡೆದ ಅವರು ಸುಮಾರು ಏಳು ವರ್ಷಗಳ ಕಾಲ ದೆಹಲಿ ಹೈಕೋರ್ಟ್‌ನಲ್ಲಿ ಆದಾಯ ತೆರಿಗೆ ಇಲಾಖೆಯ ಹಿರಿಯ ದರ್ಜೆಯ ವಕೀಲರಾಗಿದ್ದರು. ವಿವಿಧ ಅಪರಾಧ ಪ್ರಕರಣಗಳಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ದೆಹಲಿ ಸರ್ಕಾರವನ್ನು ಪ್ರತಿನಿಧಿಸಿದ್ದರು. 2004ರಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ದೆಹಲಿ ಸರ್ಕಾರದ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡರು.

2005ರ ಜೂನ್ 24ರಂದು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಆಯ್ಕೆಗೊಂಡ ಹಲವಾರು ಕ್ರಿಮಿನಲ್ ಮೊಕದ್ದಮೆಗಳಲ್ಲಿ ವಾದಿಸಿದ್ದಾರೆ. ಬಳಿಕ 2006ರ ಫೆಬ್ರವರಿ 20ರಂದು ದೆಹಲಿ ಹೈಕೋರ್ಟ್‌ನ ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. 2018ರ ಡಿಸೆಂಬರ್ 12ರಂದು ಆಗಿನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೊಯ್ ಅವರ ನೇತೃತ್ವದ ಐದು ಸದಸ್ಯರ ಸಮಿತಿ ಖನ್ನಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಲು ಶಿಫಾರಸು ಮಾಡಿತು. 2019ರ ಜನವರಿ 18ರಂದು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಖನ್ನಾ ಅವರನ್ನು ನೇಮಕ ಮಾಡಲಾಗಿದ್ದು, ಇವರು 2025ರ ಮೇ 13ರಂದು ನಿವೃತ್ತರಾಗಲಿದ್ದಾರೆ.

Sanjiv Khanna

ವೃತ್ತಿ ಜೀವನದ ಪ್ರಮುಖ ಘಟನಾವಳಿ

ಕಳೆದ ಏಪ್ರಿಲ್‌ನಲ್ಲಿ ಖನ್ನಾ ಅವರು ವಿದ್ಯುನ್ಮಾನ ಮತಯಂತ್ರಗಳಾದ ಇವಿಎಂಗಳಲ್ಲಿ ವಿವಿಪ್ಯಾಟ್ ಮೂಲಕ ಚಲಾವಣೆಯಾದ ಮತಗಳ ಮರು ಪರಿಶೀಲನೆಗೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದರು. ಅಲ್ಲದೇ ಚುನಾವಣಾ ಬಾಂಡ್‌ಗಳಿಗೆ ಸಾಂವಿಧಾನಿಕ ಸಿಂಧುತ್ವ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಪೀಠದಲ್ಲಿ ಖನ್ನಾ ಅವರೂ ಇದ್ದರು.

ಸಂಜೀವ್ ಖನ್ನಾ ಅವರು ಹಲವಾರು ಪ್ರಮುಖ ತೀರ್ಪುಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರಲ್ಲಿ ಚುನಾವಣಾ ಬಾಂಡ್‌ ಕುರಿತಾದ ತೀರ್ಪು ನೀಡಿದ ಪೀಠದ ಭಾಗವಾಗಿದ್ದ ಅವರು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳಲ್ಲಿ ಚಲಾವಣೆಯಾದ ಮತಗಳ ಮರು ಪರಿಶೀಲನೆಗೊಳಿಸುರ್ವಾ ಅರ್ಜಿ ವಜಾ, ವ್ಯಕ್ತಿ ಸ್ವಾತಂತ್ರ್ಯ, ಗೌಪ್ಯತೆ ಮತ್ತು ಮಾನವ ಹಕ್ಕುಗಳಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಇವರು ತೀರ್ಪು ನೀಡಿದ್ದಾರೆ.

ಪರಿಸರ ಸುಸ್ಥಿರತೆಯೊಂದಿಗೆ ಆರ್ಥಿಕ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಹಲವು ಮಹತ್ವದ ತೀರ್ಪು ನೀಡಿರುವ ಖನ್ನಾ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂದಿಯಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ಮಂಜೂರು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಸುಪ್ರೀಂಕೋರ್ಟ್ ಪೀಠವು ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

Haryana Election: ಹರಿಯಾಣದಲ್ಲಿ ಬಿಜೆಪಿ ಗೆಲುವಿನ ಹಿಂದಿದ್ದ ಶಕ್ತಿ ಧರ್ಮೇಂದ್ರ ಪ್ರಧಾನ್

ಇದಲ್ಲದೆ ಸಂವಿಧಾನದ ಆರ್ಟಿಕಲ್ 370 ರದ್ದು, ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಣೆ ಸೇರಿದಂತೆ ಹಲವು ಪ್ರಮುಖ ತೀರ್ಪು ನೀಡುವಲ್ಲಿ ಸುಪ್ರೀಂ ಕೋರ್ಟ್ ನ ಪೀಠದಲ್ಲಿ ಸಂಜೀವ್ ಖನ್ನಾ ಪ್ರಮುಖ ಪಾತ್ರವಹಿಸಿದ್ದರು.