Wednesday, 23rd October 2024

Pralhad Joshi: ದೇಶದ 48 ಕ್ಷೇತ್ರಗಳ ಬಿಜೆಪಿ ಪಟ್ಟಿ ಒಟ್ಟಿಗೇ ಪ್ರಕಟ ಸಾಧ್ಯತೆ: ಪ್ರಲ್ಹಾದ್‌ ಜೋಶಿ

Pralhad Joshi

ನವದೆಹಲಿ: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಹಾಗಾಗಿ ಎನ್‌ಡಿಎ (NDA) ಅಭ್ಯರ್ಥಿ ಆಯ್ಕೆಗೆ ಎಲ್ಲರೂ ಸೇರಿ ತೀರ್ಮಾನ ಮಾಡಬೇಕಾಗುತ್ತದೆ. ಎರಡ್ಮೂರು ದಿನದಲ್ಲಿ ಗೊಂದಲ ಬಗೆಹರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಪಟ್ಟಣ (Channapatna) ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್ ಸೇರಿಯೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಈಗಾಗಲೇ ನಾನು, ರಾಜ್ಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜತೆ ಚರ್ಚಿಸಿದ್ದೇವೆ. ವಿಜಯೇಂದ್ರ ಎಚ್ಡಿಕೆ ಅವರೊಂದಿಗೂ ಮಾತನಾಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ: ಜೋಶಿ

ಹೈಕಮಾಂಡ್ ಜತೆ ಚರ್ಚೆ ನಡೆದಿದೆ

ಎಚ್ಡಿಕೆ ಮತ್ತು ವಿಜಯೇಂದ್ರ ಇಬ್ಬರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಿದ್ದಾರೆ. ಎಚ್ಡಿಕೆ ತಮ್ಮ ಅಂತಿಮ ನಿರ್ಧಾರವನ್ನು ಇನ್ನೂ ತಿಳಿಸಿಲ್ಲ. ಇನ್ನು ಎರಡ್ಮೂರು ದಿನಗಳಲ್ಲಿ ತಿಳಿಸಬಹುದು ಎಂದು ಜೋಶಿ ಹೇಳಿದರು.

ಯೋಗೇಶ್ವರ್ ಆದರೆ ಒಳ್ಳೇದು

ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ಆದರೆ ಒಳ್ಳೆಯದು. ಆದರದು ಕುಮಾರಸ್ವಾಮಿ ಅವರ ಕ್ಷೇತ್ರ. ಹೀಗಾಗಿ ಅವರ ನಿರ್ಧಾರವೂ ಪ್ರಮುಖವಾಗುತ್ತದೆ ಎಂದು ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದರು.

ಚನ್ನಪಟ್ಟಣ ಸೇರಿದಂತೆ ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ ಯಾವುದೇ ಕ್ಷೇತ್ರವಿರಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಎಂದು ಹೇಳಿದ ಜೋಶಿ ಅವರು, ಬಿಜೆಪಿ ವರಿಷ್ಠರು ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಎಚ್ಡಿಕೆ ಅವರೊಂದಿಗೆ ಚರ್ಚಿಸಿಯೇ ಅಭ್ಯರ್ಥಿ ಆಯ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | R Ashok: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ, ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌: ಆರ್‌. ಅಶೋಕ್‌

48 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಒಟ್ಟಿಗೇ ಪ್ರಕಟ

ವಿಧಾನಸಭೆ ಉಪ ಚುನಾವಣೆಗೆ ದೇಶದ 48 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೇ ಬಿಡುಗಡೆ ಆಗೋ ಸಾಧ್ಯತೆಯಿದೆ ಎಂದು ತಿಳಿಸಿದ ಸಚಿವ ಪ್ರಲ್ಹಾದ್‌ ಜೋಶಿ ಅವರು, ಕರ್ನಾಟಕದ ಮೂರು ಕ್ಷೇತ್ರಗಳೂ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ಶೀಘ್ರವೇ ಅಭ್ಯರ್ಥಿಗಳನ್ನು ಹೆಸರಿಸಲಿದೆ ಎಂದು ಹೇಳಿದರು.