Thursday, 24th October 2024

Gruha Arogya Scheme: ಸ್ಟೆಂಟ್ ಹಾಕಿಸಿಕೊಂಡು 24 ವರ್ಷ ಆಯ್ತು, ಆರಾಮಾಗಿ ಓಡಾಡಿಕೊಂಡಿದ್ದೇನೆ ಎಂದ ಸಿದ್ದರಾಮಯ್ಯ

Gruha Arogya Scheme

ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ. ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಸ್ಟೆಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸಾನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸಾನೂ ಮಾಡ್ತಿದ್ದೀನಿ, ವ್ಯಾಯಾಮಾನೂ ಮಾಡ್ತಿದ್ದೀನಿ. ಆರಾಮಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ ಎಂದು ಅವರು ತಮ್ಮದೇ ಅನುಭವಗಳ ಆರೋಗ್ಯ ಸಂದೇಶ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ” (Gruha Arogya Scheme) ನೂತನ‌ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರೋಗಿಗಳೊಂದಿಗೆ ಝೂಮ್‌ ಕಾಲ್‌ (zoom call) ನಲ್ಲಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.

ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದರು.

ಈ ಸುದ್ದಿಯನ್ನೂ ಓದಿ | Karnataka Rain: ನಾಳೆ ಬೆಂಗಳೂರು, ಕೋಲಾರ, ಹಾಸನ ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ

ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಎಂದು ಸಿಎಂ ತಿಳಿಸಿದರು.

ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ

ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ ಎಂದರು.

ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ

ಕ್ಯಾನ್ಸರ್ ಕೂಡ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ ಎಂದರು.

ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದು ತಿಳಿಸಿದ ಸಿಎಂ ಅವರು, ಮೊಟ್ಟೆ, ಮೀನು, ಮಾಂಸ ತಿಂದರೆ ಡಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Mevu mela: ಬೆಂಗಳೂರಿನಲ್ಲಿ ಅ.25 ರಂದು ಮೇವು ಮೇಳ

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಹರ್ಷಗುಪ್ತ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.