Friday, 25th October 2024

Shiggaon By Election: ಶಿಗ್ಗಾವಿಯಲ್ಲಿ ಕಾಂಗ್ರೆಸ್ ನಮಗೆ ನೇರ ಎದುರಾಳಿ ಎಂದ ಬಸವರಾಜ ಬೊಮ್ಮಾಯಿ

Shiggaon By Election

ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಯಾರನ್ನೇ ಅಭ್ಯರ್ಥಿ ಮಾಡಿದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ‌ನಮಗೆ ನೇರ ಎದುರಾಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ. ಶಿಗ್ಗಾವಿಯಲ್ಲಿ (Shiggaon By Election) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ ಭರತ್ ಬೊಮ್ಮಾಯಿಗೆ ನನಗಿಂತ ಹೆಚ್ಚಿನ ದೊಡ್ಡ ಬೆಂಬಲ ದೊರೆಯುತ್ತದೆ. ದೊಡ್ಡ ಅಂತರದಲ್ಲಿ ಭರತ್ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿಗ್ಗಾವಿ, ಸಂಡೂರು ಬಿಜೆಪಿ ಗೆಲ್ಲುತ್ತದೆ. ಚನ್ನಪಟ್ಟಣವನ್ನೂ ಎನ್‌ಡಿಎ ಗೆಲ್ಲುತ್ತದೆ ಎಂದರು.

ಕ್ಷೇತ್ರದಲ್ಲಿ ಯಾವುದೇ ಅಸಮಾಧಾನ ಇಲ್ಲ

ಕ್ಷೇತ್ರದಲ್ಲಿ ಅಸಮಾಧಾನ ಇರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾನು ಚುನಾವಣೆ ಮಾಡುವಾಗ ಸಣ್ಣಪುಟ್ಟ ಅಸಮಾಧಾನ ಇತ್ತು. ಈಗ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡುವಾಗ ಯಾವುದೇ ಭಿನ್ನಮತ ಇಲ್ಲ ಎಂದರು.

ಈ ಸುದ್ದಿಯನ್ನೂ ಓದಿ | Shiggaon By Election: ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಬೃಹತ್ ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶನ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ನಿಂತರೂ ಗೆಲ್ಲುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರಿಗೆ ಕಾಂಗ್ರೆಸ್‌ನಲ್ಲಿ ಸರಿಯಾದ ಅಭ್ಯರ್ಥಿ ಹುಡುಕಲಿಕ್ಕೆ ಆಗಲಿಲ್ಲ. ಇದರ ಮೇಲೆ ನೀವೆ ಅರ್ಥ ಮಾಡಿಕೊಳ್ಳಿ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು.

ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ ಮಾಡಿದ್ದೇನೆ. ಗೊಬ್ಬರಕ್ಕೆ ಸಬ್ಸಿಡಿ ಕೊಡುತ್ತಿದ್ದೇವೆ. ರೈತರ ಬೆಳೆಗಳಿಗೆ ಎಂಎಸ್‌ಪಿ ನೀಡುತ್ತಿದ್ದೇವೆ. ರಸ್ತೆ ಮಾಡುವ ಕೆಲಸ ಮಾಡಿದ್ದೇವೆ. ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವರದಾ ನದಿ ನೀರನ್ನು ನಿಮ್ಮ ಹೊಲಗಳಿಗೆ ಹರಿಸುವ ಭಗಿರಥನ ಕೆಲಸವನ್ನು ಯಾರಾದರೂ ಮಾಡಿದ್ದರೆ ಅದು ಬಸವರಾಜ ಬೊಮ್ಮಾಯಿ ಎಂದರು.

ಈ ಸುದ್ದಿಯನ್ನೂ ಓದಿ | Shiggaon By Election: ಕಾಂಗ್ರೆಸ್‌ ದುರಾಡಳಿತದಿಂದ ರಾಜ್ಯವನ್ನು ರಕ್ಷಿಸಲು ನನ್ನ ಮಗನನ್ನು ಗೆಲ್ಲಿಸಿ; ಬೊಮ್ಮಾಯಿ ಮನವಿ

ಭರತ್ ಬೊಮ್ಮಾಯಿಗೆ ಬೆಂಬಲಿಸಿ

ಕ್ಷೇತ್ರದಲ್ಲಿ 18 ಸಾವಿರ ಮನೆಗಳು, ಕಾಂಕ್ರಿಟ್ ರಸ್ತೆ, ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮುಂದುವರೆಸಬೇಕೆಂದರೆ ಭರತ್ ಬೊಮ್ಮಾಯಿಗೆ ಬೆಂಬಲಿಸಬೇಕು. ಕಾಂಗ್ರೆಸ್‌ನವರು ಗ್ಯಾರೆಂಟಿ ಕೊಡುತ್ತೇನೆ ಎಂದು ಜನರಿಗೆ ಮೋಸ ಮಾಡುತ್ತಿದ್ದಾರೆ‌. ಜನರಿಗೆ ನಾವು ಐದು ಕೆಜಿ ಅಕ್ಕಿ ಕೊಡುತ್ತೇವೆ ಎಂದರೆ ಇವರು ದುಡ್ಡು ಇಲ್ಲ ಎಂದರು. ಗೃಹಲಕ್ಷ್ಮೀ ಹಣ ಬರುತ್ತಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಹಣ ಬರುತ್ತಿಲ್ಲ‌. ಆದರೆ, ಇವರು ಮುಡಾದಲ್ಲಿ 14 ಸೈಟು ಹೊಡೆದಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಹೀಗಾಗಿ ಕಾಂಗ್ರೆಸ್‌ ಅನ್ನು ಸೋಲಿಸಬೇಕು ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.