Monday, 28th October 2024

ಹಸಿರು ಝೋನ್ ಹಾನಸದಲ್ಲಿ ಕರೋನಾ ಪಾಸಿಟೀವ್

ಹಾಸನ:

ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಮೊಟ್ಟ ಮೊದಲಿಗೆ ಒಂದೇ ದಿನ 5 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಮುಂದೆ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು ಹೆಚ್ಚಿನ ಜಾಗರೂಕತೆ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಸಬೇಕೆಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಎಲ್ಲಾ ತಾಲ್ಲೂಕಿನ ತಹಶಿಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಜಿಲ್ಲಾದ್ಯಂತ ಕಟ್ಟುನಿಟ್ಟಿನ ಎಚ್ಚರವಹಿಸಿ ಎಲ್ಲಾ ರೀತಿಯಲ್ಲಿಯೂ ಜಾಗೃತರಾಗಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಚೆಕ್‍ಪೋಸ್ಟ್‍ಗಳಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ಮಾಡಬೇಕೆಂದು ನಿರ್ದೇಶನ ನೀಡಿದರು.

ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವವರನ್ನು ಚೆಕ್‍ಪೋಸ್ಟ್‍ಗಳಲ್ಲಿಯೇ ತಡೆದು ಅವರನ್ನು ಕ್ವಾರಂಟೈನ್‍ಗೆ ಕಳುಹಿಸಬೇಕು, ತಹಶಿಲ್ದಾರರು ಪ್ರತಿದಿನ ಚೆಕ್‍ಪೋಸ್ಟ್‍ಗಳನ್ನು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದರು. ಕಂದಾಯ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೆಚ್ಚು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಪ್ರತಿ ತಾಲ್ಲೂಕಿನಲ್ಲಿ 2 ಹೋಟೆಲ್‍ಗಳನ್ನು ಹೋಂ ಕ್ವಾರಂಟೈನ್ ಮಾಡಬಹುದಾದ ಸ್ಥಳಗಳೆಂದು ಗುರುತಿಸಬೇಕೆಂದರಲ್ಲದೆ, ಪರಸ್ಥಳಗಳಿಂದ ಬಂದವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಕ್ವಾಂರಂಟೈನ್ ಇರಲು ಹಿಚ್ಚಿಸದಿದ್ದಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಹೋಟೆಲ್‍ಗಳಲ್ಲಿ ಹೋಂ ಕ್ವಾರಂಟೈನ್ ಆಗಲು ವ್ಯವಸ್ಥೆ ಮಾಡಬೇಕು ಎಂದರು.
ಎ.ಪಿ.ಎಂ.ಸಿ.ಯಲ್ಲಿ ಪ್ರತ್ಯೇಕ ಕ್ವಾರಂಟೈನ್ ವ್ವವಸ್ಥೆ ಮಾಡುವುದರ ಜೊತೆಗೆ ತಹಶೀಲ್ದಾರರು ಖುದ್ದು ಭೇಟಿ ನೀಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಚನ್ನರಾಯಪಟ್ಟಣದಿಂದ ವಿಡಿಯೋ ಸಂವಾದ ಸಭೆಯಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ ಪಾಲ್ಗೊಂಡು ಮಾತನಾಡಿ ಜಿಲ್ಲೆಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಹೆಚ್ಚಿನ ಭದ್ರತೆ ರೂಪಿಸಿ ಎಂದು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು.

ಜಿಲ್ಲೆ ಕೊವೀಡ್-19 ಪಾಸಿಟಿವ್ ಆಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಆರೋಗ್ಯ ಸುರಕ್ಷತಾ ಪರಿಕರಗಳನ್ನು ನೀಡಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಶಾಸಕರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್ ಅವರು ಮಾತನಾಡಿ ಚೆಕ್‍ಪೋಸ್ಟ್‍ಗಳಲ್ಲಿ ಸರಕು ಸಾಗಾಣಿಕಾ ವಾಹನಗಳಲ್ಲಿ ಚಾಲಕನನ್ನು ಹೊರತುಪಡಿಸಿ ಬೇರೆ ಯಾರೇ ಬಂದರೂ ಅವರನ್ನು ಅಲ್ಲಿಯೇ ತಡೆದು ಪರಿಶೀಲಿಸಿ ಹೋಂ ಕ್ವಾರಂಟೈನ್‍ಗೆ ಕಳುಹಿಸಬೇಕೆಂದು ಹೇಳಿದರು.

ಎಲ್ಲಾ ತಾಲೂಕುಗಳ ಪೊಲೀಸ್ ಸಿಬ್ಬಂದಿ ಚೆಕ್‍ಪೋಸ್ಟ್‍ಗಳಲ್ಲಿ ಸೇವಾ ಸಿಂಧು ಪಾಸ್ ಇಲ್ಲದೆ ಬಂದಂತಹ ವ್ಯಕ್ತಿಗಳನ್ನು ಗುರುತಿಸಿ ತಪಾಸಣೆಗೆ ಒಳಪಡಿಸಬೇಕೆಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ತಹಶಿಲ್ದಾರ್ ಶಿವಶಂಕರಪ್ಪ ಮತ್ತಿತರರಿದ್ದರು.