Wednesday, 23rd October 2024

Baba Siddique: ಸಕಲ ಸರ್ಕಾರಿ ಗೌರವದೊಂದಿಗೆ ಸಿದ್ದಿಕಿ ಅಂತ್ಯಕ್ರಿಯೆ; ಶಿಂಧೆ ಸರ್ಕಾರ ಘೋಷಣೆ- ಮೂರನೇ ಆರೋಪಿಗಾಗಿ ತಲಾಶ್‌

baba siddiqui

ಮುಂಬೈ: ಶೂಟೌಟ್‌ನಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಬಾಬಾ ಸಿದ್ದಿಕಿ(Baba Siddique) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಏಕನಾಥ್‌ ಶಿಂಧೆ(Ekanath Shinde) ಮಾಹಿತಿ ನೀಡಿದ್ದಾರೆ. ಅದಾಗ್ಯೂ ಅಂತ್ಯಕ್ರಿಯೆ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಪ್ರಕಟಗೊಂಡಿದ್ದು, ಮಾಜಿ ರಾಜ್ಯ ಸಚಿವ ಬಾಬಾ ಸಿದ್ದಿಕಿ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರ ನಡೆಸಲಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ. 2004 ಮತ್ತು 2008 ರ ನಡುವೆ, ಬಾಬಾ ಸಿದ್ದಿಕಿ ವಿವಿಧ ಖಾತೆಗಳ ರಾಜ್ಯ ಸಚಿವರಾಗಿ ಮತ್ತು MHD ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದಿದ್ದಾರೆ.

ನಿನ್ನೆ ರಾತ್ರಿ ದುಷ್ಕರ್ಮಿಗಳ ದಾಳಿಗೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ(NCP) ನಾಯಕ ಬಾಬಾ ಸಿದ್ದಿಕಿ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಈ ದಾಳಿ ಹಿಂದೆ ಲಾರೆನ್ಸ್‌ ಬಿಷ್ನೋಯಿ ಗ್ಯಾಂಗ್‌ ಕೈವಾಡ ಇದೆ ಎಂಬುದು ತನಿಖೆ ವೇಳೆ ಬಯಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌(Bishnoi Gang)ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ. ಪ್ರಕರಣದ ಮೂರನೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳಿನಿಂದ ಸಿದ್ದಿಕ್ ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದೇವೆ ಎಂದು ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬಾಂದ್ರಾ ಪೂರ್ವದಲ್ಲಿರುವ ಅವರ ಮಗ ಮತ್ತು ಮಹಾರಾಷ್ಟ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ರಾತ್ರಿ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ದಸರಾ ಸಂದರ್ಭದಲ್ಲಿ ಸಿದ್ದಿಕ್ ಪಟಾಕಿ ಸಿಡಿಸುತ್ತಿದ್ದ ವೇಳೆ ಮುಖವನ್ನು ಕರವಸ್ತ್ರದಿಂದ ಮುಚ್ಚಿಕೊಂಡು ಬಂದಿದ್ದು, ಹೊರ ಬಂದ ಮೂವರು ದುಷ್ಕರ್ಮಿಗಳು, 9.9 ಎಂಎಂ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಗುಂಡು ಸಿದ್ದಿಕಿಯ ಎದೆಗೆ ಬಡಿದು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಒಂದು ಗುಂಡು ಬಾಬಾ ಸಿದ್ದಿಕ್ ಅವರ ವಾಹನದ ವಿಂಡ್ ಶೀಲ್ಡ್ ಅನ್ನು ಸೀಳಿದ್ದು, ಹಲವು ಬಾರಿ ಗುಂಡು ಹಾರಿಸಿರುವುದನ್ನು ದೃಢಪಡಿಸಿದೆ. ಪೊಲೀಸರು ಸ್ಥಳದಿಂದ ಮೂರು ಬುಲೆಟ್ ಕೇಸಿಂಗ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಇಬ್ಬರು ಆರೋಪಿಗಳು ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದವರು ಎನ್ನಲಾಗಿದೆ.

ಬಾಬಾ ಸಿದ್ದೀಕಿ ಯಾರು?

ಸೆಪ್ಟೆಂಬರ್ 13, 1959 ರಂದು ಬಿಹಾರ ಪಾಟ್ನಾದಲ್ಲಿ ಜನಿಸಿದ ಬಾಬಾ ಸಿದ್ದಿಕಿ ಮುಂಬೈನಲ್ಲಿ ಬೆಳೆದವರು. 1977ರಲ್ಲಿ ಹದಿಹರೆಯದವರಾಗಿದ್ದಾಗ ಕಾಂಗ್ರೆಸ್ ಸೇರಿಕೊಂಡಿದ್ದರು. ಸ್ಥಳೀಯ ಮತದಾರರೊಂದಿಗೆ ಬಲವಾದ ಸಂಪರ್ಕದಿಂದಾಗಿ ಅವರು ಶೀಘ್ರವಾಗಿ ರಾಜಕೀಯ ಯಶಸ್ಸು ಗಳಿಸಿದ್ದರು.

ಬಾಬಾ ಸಿದ್ದೀಕ್ 1980 ರಲ್ಲಿ ಬಾಂದ್ರಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದರು. ಮುಂದಿನ ಎರಡು ವರ್ಷಗಳಲ್ಲಿ ಅದರ ಮುಖ್ಯಸ್ಥರಾಗಿ ಆಯ್ಕೆಯಾದರು. 1988 ರಲ್ಲಿ, ಅವರು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷರಾದರು ಮತ್ತು 1992 ರಲ್ಲಿ ಪುರಸಭೆಯ ಕೌನ್ಸಿಲರ್ ಆಗಿ ಆಯ್ಕೆಯಾದರು.

1999ರಲ್ಲಿ, ಸಿದ್ದೀಕ್ ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ವಿಧಾನಸಭೆಯ ಶಾಸಕ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಅವರ ತಳಮಟ್ಟದಲ್ಲಿ ಭಾರೀ ಬೆಂಬಲ ಮತ್ತು ನಾನಾ ಸಮುದಾಯಗಳಿಂದ ಮತದಾರರನ್ನು ಒಟ್ಟುಗೂಡಿಸುವ ಸಾಮರ್ಥ್ಯದ ಪರಿಣಾಮವಾಗಿ ಅವರಿಗೆ ಗೆಲವು ಸುಲಭವಾಗಿತ್ತು ಅವರು ಸತತ ಮೂರು ಬಾರಿ ಬಾಂದ್ರಾ ಪಶ್ಚಿಮವನ್ನು ಪ್ರತಿನಿಧಿಸಿದರು, 2014 ರವರೆಗೆ ಈ ಸ್ಥಾನವನ್ನು ಅಲಂಕರಿಸಿದ್ದರು.

ಶಾಸಕರಾಗಿದ್ದ ಅವಧಿಯಲ್ಲಿ, ಸಿದ್ದೀಕ್ ಅವರು ತಮ್ಮ ಕ್ಷೇತ್ರದ ಮೂಲಸೌಕರ್ಯಗಳನ್ನು ಸುಧಾರಿಸಲು, ಕೊಳೆಗೇರಿ ಪುನರ್ವಸತಿ, ಆರೋಗ್ಯ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಸಲು ವ್ಯಾಪಕವಾಗಿ ಕೆಲಸ ಮಾಡಿದರು. ಹೀಗಾಗಿ ಅವರಿಗೆ ಹೆಚ್ಚಿನ ಜನಬೆಂಬಲವಿತ್ತು.

ಈ ಸುದ್ದಿಯನ್ನೂ ಓದಿ: Baba Ramdev: ಆಹಾರ ಪದಾರ್ಥಗಳನ್ನು ಕೊಳಕು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಧ್ವನಿ ಎತ್ತಿ; ಮುಸ್ಲಿಂ ಮುಖಂಡರಿಗೆ ಬಾಬಾ ರಾಮದೇವ್‌ ಕರೆ