Wednesday, 23rd October 2024

Haryana CM Swearing-in Ceremony:ಹರಿಯಾಣ ಸಿಎಂ ಆಗಿ ಇಂದು ನಯಾಬ್‌ ಸಿಂಗ್‌ ಸೈನಿ ಪ್ರಮಾಣ ವಚನ

saini

ಚಂಡೀಗಢ: ಹರಿಯಾಣ(Haryana Assembly Election)ದಲ್ಲಿ ಬಿಜೆಪಿ(BJP) ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದು, ಇಂದು ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ(Nayab Singh Saini) ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ(Haryana CM Swearing-in Ceremony) ಸ್ವೀಕರಿಸಲಿದ್ದಾರೆ. ಸೈನಿ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಐತಿಹಾಸಿಕ ಮೂರನೇ ಸತತ ಗೆಲುವಿನತ್ತ ಮುನ್ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪಂಚಕುಲದ ಪರೇಡ್ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ನಾಯಕರು ಸಮಾರಂಭದಲ್ಲಿ ಪಾಲ್ಗೊ‍ಳ್ಳಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಮೊದಲು, ಸೈನಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಪಂಚಕುಲದ ವಾಲ್ಮೀಕಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ, ಸೈನಿ ಅವರು ರಾಜ್ಯಪಾಲ ದತ್ತಾತ್ರೇಯ ಅವರನ್ನು ಭೇಟಿ ಮಾಡಿದರು ಮತ್ತು ಪಂಚಕುಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಸೈನಿಯ ಪ್ರಮಾಣಕ್ಕೆ ಯಾರೆಲ್ಲಾ ಉಪಸ್ಥಿತಿ?

ಸೈನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಒಟ್ಟಾರೆಯಾಗಿ, ಸುಮಾರು 50,000 ಜನರು ಈ ಬೃಹತ್‌ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿರುವ ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಕೂಡ ಇಂದು ಬೆಳಗ್ಗೆ ಚಂಡೀಗಢಕ್ಕೆ ಆಗಮಿಸಿದ್ದಾರೆ. ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಅವರ ಇಬ್ಬರು ನಿಯೋಗಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹರಿಯಾಣ ಫಲಿತಾಂಶ

ಭಾರೀ ನೆಕ್‌ ಟು ನೆಕ್‌ ಫೈಟ್‌ ನಡುವೆಯೇ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದಿದೆ. 90 ಅಸೆಂಬ್ಲಿ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆದು ಹ್ಯಾಟ್ರಿಕ್‌ ಸಾಧನೆ ಮಾಡಿತ್ತು. ಆಮೂಲಕ ಚುನಾವಣೋತ್ತರ ಸಮೀಕ್ಷೆಯನ್ನೂ ಹುಸಿ ಮಾಡಿತ್ತು. ಮತ್ತೊಂದೆಡೆ ಹತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 37 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

2019 ರಿಂದ ಮಾರ್ಚ್ 2024 ರವರೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಜೆಪಿ ತೀರ ಮುಖಭಂಗ ಎದುರಿಸಿದ್ದು, ಮತ್ತೊಂದೆಡೆ ಎಎಪಿ ಕೂಡ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಇನ್ನು ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾವಿತ್ರಿ ಜಿಂದಾಲ್ ಸೇರಿದಂತೆ ಮೂವರು ಪಕ್ಷೇತರರೂ ಗೆದ್ದು ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.