Thursday, 19th September 2024

Kolkata Doctors Protest: 38 ದಿನಗಳ ಪ್ರತಿಭಟನೆ ಇಂದೇ ಅಂತ್ಯ? ಕೋಲ್ಕತ್ತಾ ವೈದ್ಯರ ನಿರ್ಧಾರ ಏನು?

Kolkata Doctors protest

ನವದೆಹಲಿ: ಕೋಲ್ಕತ್ತಾ ಟ್ತೈನಿ ವೈದ್ಯೆ ಕೊಲೆ ಅತ್ಯಾಚಾರ ಪ್ರಕರಣ(Kolkata Doctor Murder) ಖಂಡಿಸಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ(Kolkata Doctors Protest) ಕೈಬಿಡುವ ಅಥವಾ ಮುಂದುವರೆಸುವ ಬಗ್ಗೆ ಇಂದು ಮಹತ್ವದ ನಿರ್ಧಾರ ಘೋಷಣೆಯಾಗಲಿದೆ. ಕಳೆದ 38 ದಿನಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಇಂದು ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸ್ ಕಮಿಷನರ್ ವಿನೀತ್ ಕುಮಾರ್ ಗೋಯಲ್ ಮತ್ತು ಇಬ್ಬರು ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದ್ದು, ಈ ಹಿನ್ನೆಲೆ ಇಂದಿನಿಂದ ವೈದ್ಯರು ಪ್ರತಿಭಟನೆ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೆ.10ರ ಸಂಜೆ ಐದು ಗಂಟೆಯಿಂದ ವೈದ್ಯರು ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂಕೋರ್ಟ್‌ ಆದೇಶಿಸಿತ್ತು. ಇದರ ಬೆನ್ನಲಲೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ಕೊಟ್ಟಿ ಸಿಎಂ ಮಮತಾ ಬ್ಯಾನರ್ಜಿ ವೈದ್ಯರ ಮನವೊಲಿಸಲು ಯತ್ನಿಸಿದರು. ಇದೀಗ ವೈದ್ಯರ ಬೇಡಿಕೆಗೆ ಸರ್ಕಾರ ಬಹುತೇಕ ಒಪ್ಪಿಗೆ ಸೂಚಿಸಿದ್ದು, ಹೀಗಾಗಿ ಪ್ರತಿಭಟನೆ ಕೈಬಿಡುವ ಸಾಧ್ಯತೆ ಹೆಚ್ಚಿದೆ.

ಇನ್ನು ವೈದ್ಯ ದೇಬಿಶ್‌ ಹಾಲ್ಡರ್‌ ಪ್ರತಿಕ್ರಿಯಿಸಿದ್ದು, ನಾವಿನ್ನು ಪ್ರತಿಭಟನೆ ಕೈಬಿಡುವ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸುಪ್ರೀಂಕೋರ್ಟ್‌ ವಿಚಾರಣೆಯ ನಂತರವಷ್ಟೇ ಈ ನಿರ್ಧಾರಕ್ಕೆ ಬರಲಾಗುತ್ತದೆ. ಸರ್ಕಾರ ಕೇವಲ ಮೌಖಿಕ ಭರವಸೆ ನೀಡಿದೆ. ನಾವೆಲ್ಲ ಕುಳಿತು ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Kolkata murder probe) ಎಫ್ಐಆರ್ ದಾಖಲಿಸಲು ವಿಳಂಬ ಮತ್ತು ಸಾಕ್ಷ್ಯಗಳನ್ನು ನಾಶ ಮಾಡಲು ಯತ್ನಿಸಿದ ಆರೋಪದ ಮೇಲೆ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಪೊಲೀಸ್ ಅಧಿಕಾರಿರೊಬ್ಬರ್ನು ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಬಂಧಿಸಿದೆ.

ಈ ಹಿಂದೆ, ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಪ್ರತ್ಯೇಕ ತನಿಖೆಯಲ್ಲಿ ಘೋಷ್ ಅವರನ್ನು ಕೇಂದ್ರ ಸಂಸ್ಥೆ ಬಂಧಿಸಿತ್ತು. ಅವರು ಸೆಪ್ಟೆಂಬರ್ 23 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಂಧಿತ ಪೊಲೀಸ್ ಅಧಿಕಾರಿಯನ್ನು ತಾಲಾ ಪೊಲೀಸ್ ಠಾಣೆಯ ಎಸ್ಎಚ್ಒ ಅಭಿಜಿತ್ ಮಂಡಲ್ ಎಂದು ಗುರುತಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಆಗಸ್ಟ್ 26 ರಂದು ಮಾಜಿ ಪ್ರಾಂಶುಪಾಲರ ಮೇಲೆ ಎರಡನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಿತ್ತು. ಸೆಪ್ಟೆಂಬರ್ 17 ರಂದು ಸಲ್ಲಿಸಲಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಏನಿದು ಕೇಸ್‌?

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ ವೈದ್ಯೆಯ ಶವ ಪತ್ತೆಯಾಗಿತ್ತು. ಕೊಲೆಯಾಗುವ ಮೊದಲು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಲಾಗಿದೆ ಎಂದು ಶವಪರೀಕ್ಷೆ ವರದಿಗಳು ಸೂಚಿಸಿವೆ.

ಈ ಸುದ್ದಿಯನ್ನೂ ಓದಿ: Kolkata Murder Case: ಕೋಲ್ಕತ್ತಾ ಆರ್‌.ಜಿ.ಕರ್‌ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮನೆ ಮೇಲೆ ಇಡಿ ದಾಳಿ