Thursday, 19th September 2024

ಲೈಂಗಿಕ ದೌರ್ಜನ್ಯ ಪ್ರಕರಣ: ಕಾಂಗ್ರೆಸ್‌ನವರ ‘ಆಯ್ಕೆ ಸಿದ್ಧಾಂತ’ ಖಂಡನಾರ್ಹ- ಸಂಬೀತ್‌ ಪಾತ್ರ

ನವದೆಹಲಿ: ಕಾಂಗ್ರೆಸ್‌ ಆಡಳಿತವಿರುವ ರಾಜಸ್ಥಾನ, ಪಂಜಾಬ್‌ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲೂ ದಲಿತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಾಗ ಒಂದೇ ಒಂದು ಟ್ವೀಟ್‌ ಮಾಡುವುದಿಲ್ಲ, ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್‌ನವರ ಇಂಥ ‘ಆಯ್ಕೆ ಸಿದ್ಧಾಂತ’ ಖಂಡನಾರ್ಹ ಎಂದು ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ ಹೇಳಿದ್ದಾರೆ.

ನೈರುತ್ಯ ದೆಹಲಿಯಲ್ಲಿ ನಡೆದಿರುವ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಾವಿನ ಪ್ರಕರಣವನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಮ್ಮ ರಾಜಕೀಯ ಅಜೆಂಡವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಇದೇ ವೇಳೆ ಬಿಜೆಪಿ ಆರೋಪಿಸಿದೆ.

‘ರಾಹುಲ್ ಗಾಂಧಿಯವರು ಸಂತ್ರಸ್ತ ಬಾಲಕಿಯ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು’ ಎಂದು ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ರಾಹುಲ್ ಗಾಂಧಿಯವರ ಈ ಬಗ್ಗೆ ನಮ್ಮ ತಕರಾರಿಲ್ಲ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಕಾನೂನು ರೀತ್ಯಾ ಅಪರಾಧವಾಗಿದೆ. ಆದರೆ, ರಾಹುಲ್, ಸಂತ್ರಸ್ತೆಯ ಕುಟುಂಬದವರ ಫೋಟೊಗಳನ್ನು ಟ್ವೀಟ್‌ ಮಾಡುವ ಮೂಲಕ ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ‘ಪೋಕ್ಸೊ’ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವನ್ನು ಒತ್ತಾಯಿಸಿದರು.

Leave a Reply

Your email address will not be published. Required fields are marked *