Friday, 20th September 2024

ಉತ್ತರಾಖಂಡ ಮತ ಎಣಿಕೆ: ಪೈಪೋಟಿಯಲ್ಲಿ ಬಿಜೆಪಿ -ಕಾಂಗ್ರೆಸ್‌

ಕಾಶಿಪುರ: ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ -ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಲಲ್ಕುವನ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 10 ಸಾವಿರ ಮತಗಳ ಅಂತರದಿಂದ ಹಿನ್ನಡೆ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ದಾಮಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಭುವನ್ ಕಪ್ರಿ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.

ಉತ್ತರಾಖಂಡದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಆದರೂ, ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆಗಳು ಹೇಳಿದ್ದವು. ಚುನಾವಣೆಗೂ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. 50 ಶಾಸಕರ ಬೆಂಬಲ ದೊಂದಿಗೆ ಬಿಜೆಪಿಯ ಪುಷ್ಕರ್‌ ಸಿಂಗ್‌ ದಾಮಿ ಅವರು ಮುಖ್ಯಮಂತ್ರಿಯಾಗಿದ್ದರು.

ಬಿಜೆಪಿಯ ಸತ್ಪಾಲ್ ಮಹಾರಾಜ್, ಧನ್ ಸಿಂಗ್ ರಾವತ್, ಅರವಿಂದ್ ಪಾಂಡೆ, ರೇಖಾ ಆರ್ಯ, ಮದನ್ ಕೌಶಿಕ್ ಸೇರಿದಂತೆ ಪ್ರಮುಖರು ಕಣದಲ್ಲಿದ್ದಾರೆ.