ಗುಡಿಬಂಡೆ: ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯ ಚಂಡೂರು ಕ್ರಾಸ್ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಅಣ್ಣ-ತಮ್ಮಂದಿರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಯರಲ್ಲಕ್ಕೇನಹಳ್ಳಿ ಗ್ರಾಮದ ನಿವಾಸಿಗಳಾದ ಬಾಲರಾಜು (25) ಹಾಗೂ ರಾಜಶೇಖರ್ (26) ಎಂದು ಗುರುತಿಸಲಾಗಿದೆ. ಇಬ್ಬರೂ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಅಣ್ಣ-ತಮ್ಮಂದಿರು ಬೈಕ್ನಲ್ಲಿ ಗ್ರಾಮದಿಂದ ಬಾಗೇಪಲ್ಲಿಗೆ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಚಂಡೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: Accident: ಸಿಮೆಂಟ್ ಲಾರಿ–ಟ್ರ್ಯಾಕ್ಟರ್ ಡಿಕ್ಕಿ: ಕೂಲಿ ಕಾರ್ಮಿಕ ಸಾವು
ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆಗಾಗಿ ಆಟೋ ಚಾಲಕ ಆಟೋ ನಿಲ್ಲಿಸಿದ್ದ. ಮುಂದೆ ನಿಂತಿದ್ದ ಆಟೋವನ್ನು ತಪ್ಪಿಸಲು ಬೈಕ್ ಸವಾರರು ಬಲಭಾಗಕ್ಕೆ ಬಂದಾಗ, ಇದೇ ವೇಳೆ ಎದುರಿನಿಂದ ಬಂದ ಇಚರ್ ವಾಹನವು ಆಟೋ ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಬಾಲರಾಜು ಹಾಗೂ ರಾಜಶೇಖರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.