ಚಿಂತಾಮಣಿ: ಸಿಮೆಂಟ್ ಲಾರಿಯೊಂದು ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರ್ಯಾಕ್ಟರ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಐಮರೆಡ್ಡಿಹಳ್ಳಿ ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದ 60 ವರ್ಷದ ನರಸಿಂಹಪ್ಪ ಎಂದು ಗುರುತಿಸಲಾಗಿದೆ. ಬತ್ತಲಪಳ್ಳಿ ಗ್ರಾಮದಿಂದ ಟ್ರ್ಯಾಕ್ಟರ್ನಲ್ಲಿ ಕಲ್ಲು ಚಪ್ಪಡಿಗಳನ್ನು ತುಂಬಿಕೊಂಡು ಎಚ್.ಕ್ರಾಸ್ ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಲಾರಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ ನರಸಿಂಹಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Chikkaballapur News: ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು: ಸಿಇಒ ಡಾ.ವೈ.ನವೀನ್ ಭಟ್
ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.