ಚಿಕ್ಕಬಳ್ಳಾಪುರ: ತಾಲೂಕಿನ ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಇನಮಿಂಚೇನಹಳ್ಳಿ ಗ್ರಾಮದ ಚೈತ್ರಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮೂಲದ ಶಬ್ಬೀರ್ ಎಂಬ ವ್ಯಕ್ತಿಯ ವಿರುದ್ಧ ಕುಟುಂಬಸ್ಥರು ಹಲ್ಲೆ ಹಾಗೂ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಚೈತ್ರಾ ಅವರು ಕಳೆದ 7-8 ವರ್ಷಗಳಿಂದ ಪತಿಯಿಂದ ದೂರವಾಗಿ ವಾಸಿಸುತ್ತಿದ್ದು, ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಶಬ್ಬೀರ್ ಎಂಬಾತ ನೊಂದಿಗೆ ಪರಿಚಯವಿದ್ದು, ಇಬ್ಬರೂ ಚೊಕ್ಕಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆದ ಬಳಿಕ ಚೈತ್ರಾ ಅವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಶಬ್ಬೀರ್ ಸ್ಥಳದಿಂದ ತೆರಳಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಮೃತೆಯ ಮೊಬೈಲ್ ಫೋನ್ ಕೂಡ ಶಬ್ಬೀರ್ ಬಳಿ ಇದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಾಗೂ ಘಟನೆಗೂ ಮುನ್ನ ಏನಾಯಿತು ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚೈತ್ರಾ ಅವರ ಸಾವಿಗೆ ನಿಖರ ಕಾರಣವೇನು, ಇದು ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆ ಯಿಂದಷ್ಟೇ ಸ್ಪಷ್ಟವಾಗಬೇಕಿದೆ.
ಮಾಹಿತಿ ಪಡೆದ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿನ ಮಾಹಿತಿ, ಸಾಕ್ಷ್ಯಗಳು ಹಾಗೂ ಮೃತೆಯೊಂದಿಗೆ ಸಂಪರ್ಕ ದಲ್ಲಿದ್ದವರ ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯ ಬಳಿಕ ಹೊರಬರಬೇಕಿದೆ.