ಬೆಂಗಳೂರು: ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 11ರ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ವಕೀಲ ಕೆ.ಎನ್. ಜಗದೀಶ್ (Lawyer Jagadish) ಅವರ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ (caste abuse) ಆರೋಪದಡಿ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರಚೋದನಕಾರಿ ವಿಡಿಯೋ ಹರಿಬಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಮಂಜುನಾಥ್ ಎಂಬುವರ ದೂರಿನ ಆಧಾರದ ಮೇಲೆ ಈ ಕೇಸ್ ದಾಖಲಿಸಲಾಗಿದೆ. ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (BNS) ಸೆಕ್ಷನ್ 196 (ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯ) ಮತ್ತು ಸೆಕ್ಷನ್ 299 (ಜಾತಿ ಆಧಾರಿತ ನಿಂದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ್ ಎಂಬುವರು ಸಲ್ಲಿಸಿದ ದೂರಿನಲ್ಲಿ, ಜಗದೀಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಜಾತಿ ವಿರೋಧಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರಿನನ್ವಯ ಕೊಡಿಗೇಹಳ್ಳಿ ಪೊಲೀಸರು ಆಗಸ್ಟ್ 21, 2025ರಂದು ಎಫ್ಐಆರ್ ದಾಖಲಿಸಿದ್ದು, ಜಗದೀಶ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೀಗ ಜಗದೀಶ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ, ಜಗದೀಶ್ ಅವರ ಬಂಧನ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಹಕ್ಕುಚ್ಯುತಿ ಮಂಡಿಸಿದ್ದ ವಿಶ್ವನಾಥ್
ಬಿಗ್ ಬಾಸ್ ಸ್ಪರ್ಧಿಯೂ ಆಗಿದ್ದ ಲಾಯರ್ ಜಗದೀಶ್ ವಿರುದ್ಧ ಇತ್ತೀಚೆಗೆ ವಿಧಾನಸಭೆಯಲ್ಲಿ ಹಕ್ಕು ಚ್ಯುತಿ ಮಂಡಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವೈಯುಕ್ತಿಕವಾಗಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯಲಹಂಕ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಅವರು ಜಗದೀಶ್ ವಿರುದ್ಧ ಹಕ್ಕು ಚ್ಯುತಿ ಮಂಡಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಧರ್ಮಸ್ಥಳ ವಿಚಾರ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಆಧಾರ ರಹಿತವಾಗಿ ನನ್ನನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಜಗದೀಶ್ ತೇಜೋವಧೆ ಮಾಡಿದ್ದಾರೆ. ಇದರಿಂದ ನನ್ನ ಹಕ್ಕಿಗೆ ಧಕ್ಕೆಯಾಗಿದೆ ಎಂದು ವಿಶ್ವನಾಥ್ ಆರೋಪಿಸಿದ್ದರು. ಸ್ಪೀಕರ್ ಯುಟಿ ಖಾದರ್ ಅವರು ಪ್ರಕರಣದ ವಿಚಾರಣೆಯನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸುವುದಾಗಿ ಪ್ರಕಟಿಸಿದ್ದರು.