ಬಾಗೇಪಲ್ಲಿ: ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿ ಶನಿವಾರ ಹಾಡಹಗಲೇ ವ್ಯಕ್ತಿಯೊಬ್ಬ ರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪಟ್ಟಣದ ಗೂಳೂರು ರಸ್ತೆಯ ರಾಯಲ್ ಫಂಕ್ಷನ್ ಹಾಲ್ ಸಮೀಪದ ನಿವಾಸಿ ನಾಗರಾಜ್ (45) ಮೃತ ವ್ಯಕ್ತಿ. ಮೂಲತಃ ಗುಗ್ಯಂಪಲ್ಲಿ ಗ್ರಾಮದವರಾದ ನಾಗರಾಜ್ ಅವರು ಕೊಂಡರೆಡ್ಡಿಪಲ್ಲಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಬಾರ್ವೊಂದರ ಸಮೀಪ ಇದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷ, ಹಣಕಾಸಿನ ವ್ಯವಹಾರ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಾಗೇಪಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಯ ಹಿಂದಿರುವ ಆರೋಪಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ.