ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Assault: ದೇಶವೇ ಬೆಚ್ಚಿ ಬೀಳುವ ಘಟನೆ; ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

2024 ರಲ್ಲಿ ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದಿದ್ದ, ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ಕೇಳಿ ಬಂದಿದೆ.

ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

-

Vishakha Bhat Vishakha Bhat Oct 11, 2025 12:03 PM

ಕೊಲ್ಕತ್ತಾ: 2024 ರಲ್ಲಿ ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದಿದ್ದ, ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ (Physical Assault) ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ (West Bengal) ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ಕೇಳಿ ಬಂದಿದೆ. ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿಯನ್ನು ಆಸ್ಪತ್ರೆಯ ಆವರಣದೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಒಡಿಶಾದ ಜಲೇಶ್ವರ ಮೂಲದಳಾಗಿದ್ದು, ಕೋಲ್ಕತ್ತಾದಿಂದ 170 ಕಿ.ಮೀ ದೂರದಲ್ಲಿರುವ ಪಶ್ಚಿಮ ಬಂಗಾಳದ ಅತಿದೊಡ್ಡ ಕೈಗಾರಿಕಾ ಕೇಂದ್ರವಾದ ದುರ್ಗಾಪುರದ ಶೋಭಾಪುರ ಬಳಿಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆಯುತ್ತಿದ್ದಾಳೆ.

ಮೂಲಗಳು ತಿಳಿಸಿರುವ ಪ್ರಕಾರ, ವಿದ್ಯಾರ್ಥಿನಿ ಶುಕ್ರವಾರ ರಾತ್ರಿ 8.30ಕ್ಕೆ ಪುರುಷ ಸ್ನೇಹಿತನೊಂದಿಗೆ ಕ್ಯಾಂಪಸ್‌ನಿಂದ ಹೊರಬಂದಳು. ಆಕೆ ಹಿಂತಿರುಗುತ್ತಿದ್ದಾಗ, ಒಬ್ಬ ವ್ಯಕ್ತಿ ಆಕೆಯನ್ನು ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮತ್ತು ಮಹಿಳೆಯ ಜೊತೆಗಿದ್ದ ಸ್ನೇಹಿತ ಸೇರಿದಂತೆ ಇತರ ವ್ಯಕ್ತಿಗಳನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ತಂದೆ ಸುದ್ದಿಗಾರರೊಂದಿಗೆ ಮಾತನಾಡಿ, ತನ್ನ ಮಗಳು ತನ್ನ ಗೆಳೆಯನೊಂದಿಗೆ ಪಾನಿಪುರಿ ತಿನ್ನಲು ತೆರಳಿದ್ದಾಗ, ಮತ್ತೊಬ್ಬ ವ್ಯಕ್ತಿ ಅವಳನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದನು ಎಂದು ಹೇಳಿದ್ದಾರೆ. ಆದಾಗ್ಯೂ, ಪೊಲೀಸರು ಈ ಪ್ರಕರಣದ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಘಟನೆಗಳ ಅನುಕ್ರಮವನ್ನು ಪತ್ತೆಹಚ್ಚಲು ತನಿಖಾಧಿಕಾರಿಗಳು ಬಹು ಕೋನಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ವರ್ಷ 31 ವರ್ಷದ ಟ್ರೈನಿ ವೈದ್ಯೆ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆ ನಡೆಸಿದ್ದರು. ಆಗಸ್ಟ್​ 9ರಂದು ಆರ್​ಜಿ ಕರ್ ಆಸ್ಪತ್ರೆ ಟ್ರೈನಿ ವೈದ್ಯೆಯ ಶವವು ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿತ್ತು.

ಈ ಸುದ್ದಿಯನ್ನೂ ಓದಿ: RG Kar Horror : ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ಶನಿವಾರ ಪ್ರಕಟ ; ಆರೋಪಿಗೆ ಮರಣದಂಡನೆ ನೀಡುವಂತೆ ಸಿಬಿಐ ಮನವಿ

ಭೀಕರವಾಗಿ ಆಕೆಯನ್ನು ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ತನಿಖೆಯನ್ನು ಕೋಲ್ಕತ್ತಾ ಪೊಲೀಸರು ನಡೆಸಿದ್ದರು. ಆದರೆ ಕೊಲ್ಕತ್ತಾ ಹೈಕೋರ್ಟ್‌ನ ಹಸ್ತಕ್ಷೇಪದ ನಂತರ, ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಗೆ ವರ್ಗಾಯಿಸಲಾಯಿತು. ಸಿಬಿಐ ತನಿಖೆಯನ್ನು ಪೂರ್ಣಗೊಳಿಸಿ 45 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತು. ತನಿಖೆ ಬಳಿಕ ಕೋರ್ಟ್‌ ಸಂಜಯ್ ರಾಯ್ ಎಂಬಾತನೇ ಅಪರಾಧಿ ಎಂದು ತೀರ್ಪು ನೀಡಿದೆ.