ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hubballi Encounter: ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್‌ 13ರಂದು ರಿತೇಶ್‌ನನ್ನು ಕೊಲ್ಲಲಾಗಿತ್ತು.

ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ಹರೀಶ್‌ ಕೇರ ಹರೀಶ್‌ ಕೇರ Apr 25, 2025 8:06 AM

ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi encounter) ಈಚೆಗೆ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Physical Abuse) ಎಸಗಿ ಕೊಲೆ (Murder case) ಮಾಡಿ, ಆನಂತರ ಪೊಲೀಸ್ ಎನ್‌ಕೌಂಟರ್‌ನಲ್ಲಿ (Police encounter) ಬಲಿಯಾದ ಬಿಹಾರದ ರಿತೇಶ್‌ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೈಕೋರ್ಟ್‌ಗೆ (Karnataka high curt) ಸ್ಥಿತಿಗತಿ ವರದಿ ಸಲ್ಲಿಸಿತು. ಬೆಂಗಳೂರಿನ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಡಾ. ಮಧು ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು, ಸಮಯದ ಕೊರತೆಯ ಹಿನ್ನೆಲೆಯಲ್ಲಿ ಸ್ಥಿತಿಗತಿ ವರದಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದ್ದೇವೆ. ಏನೆಲ್ಲಾ ಅನುಪಾಲಿಸಬೇಕೋ ಅದೆಲ್ಲವನ್ನೂ ನಾವು ಮುಂದುವರಿಸುತ್ತೇವೆ. ನ್ಯಾಯಾಲಯದ ಆದೇಶ ಅನುಪಾಲಿಸುವುದು ನಮ್ಮ ಕರ್ತವ್ಯ ಎಂದರು. ಆಗ ಪೀಠವು ಅರ್ಜಿದಾರರ ಪರ ವಕೀಲೆಯನ್ನು ಕುರಿತು ಸ್ಥಿತಿಗತಿ ವರದಿ ಸಲ್ಲಿಸುವ ಮೂಲಕ ನಿಮ್ಮ, ನಮ್ಮ ಹಾಗೂ ಸರಕಾರದ ಪಾತ್ರವೂ ಮುಗಿದಿದೆ. ಇಷ್ಟಾಗಿಯೂ ಅರ್ಜಿ ಬಾಕಿ ಉಳಿಸಬೇಕೆಂದರೆ ಉಳಿಸಲಾಗುವುದು ಎಂದರು.

ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಹೇಳಲಾಗಿದೆ. ಇದಲ್ಲದೇ ಹಿರಿಯ ವಕೀಲ ಅದಿತ್ಯ ಸೋಂಧಿ ಅವರು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಭಾಗಿಯಾಗಿರುವುದರಿಂದ ಅಂತಿಮ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಆಲಿಸಿದ ಪೀಠವು ಏಪ್ರಿಲ್ 28ಕ್ಕೆ ವಿಚಾರಣೆ ಮುಂದೂಡಿತು.

ಏಪ್ರಿಲ್ 13ರಂದು ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಹುಬ್ಬಳ್ಳಿಯ ವಿಜಯನಗರದ ಮನೆಯ ಸಮೀಪ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ತಿಂಡಿ-ತಿನಿಸು ನೀಡುವುದಾಗಿ ಪುಸಲಾಯಿಸಿ ಅಪಹರಿಸಿದ್ದ. ತದನಂತರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ. ಇದಾದ ಕೆಲವೇ ನಿಮಿಷಗಳಲ್ಲಿ ರಿತೇಶ್ ಬಂಧನವಾಗಿತ್ತು. ಸಂಜೆ ಆತನನ್ನು ನಗರದ ಸಮೀಪ ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದ. ಈ ವೇಳೆ ಆತನ ಕಾಲಿಗೆ ಮತ್ತು ಬೆನ್ನಿಗೆ ಗುಂಡೇಟು ಹೊಡೆಯಲಾಗಿತ್ತು. ಗಾಯಗೊಂಡಿದ್ದ ಆತನನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ತರಲಾಗಿತ್ತು. ಆದರೆ, ಆ ವೇಳೆಗಾಗಲೇ ರಿತೇಶ್ ಕುಮಾರ್ ಸಾವನ್ನಪ್ಪಿದ್ದ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Hubballi girl Murder Case: ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್‌ ಸಹ ಸಿಐಡಿ ತನಿಖೆಗೆ