ಚಿಕ್ಕಬಳ್ಳಾಪುರ: ಆದಿಯೋಗಿ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಬೆಂಗಳೂರಿನಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಅಮನ್ ದೇವ್ ಮಿಶ್ರಾ (28) ಎಂದು ಗುರುತಿಸಲಾಗಿದ್ದು, ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಆದಿಯೋಗಿ ದರ್ಶನ ಮುಗಿಸಿ ಬೈಕ್ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ಹೆದ್ದಾರಿ ದಾಟುವಾಗ ಬಾಗೇಪಲ್ಲಿ ಕಡೆಯಿಂದ ಬಂದ ಕ್ಯಾಂಟರ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕ್ಯಾಂಟರ್ನ ಚಕ್ರಗಳಡಿ ಸಿಲುಕಿದ್ದು, ಸುಮಾರು 100 ಮೀಟರ್ವರೆಗೆ ಎಳೆದುಕೊಂಡು ಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಭಾನುವಾರ ರಜೆ ಹಿನ್ನೆಲೆಯಲ್ಲಿ ಆದಿಯೋಗಿ ದರ್ಶನಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದ ರಿಂದ ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿ 44ರ ಎರಡೂ ಬದಿಗಳಲ್ಲಿ ಕಿಲೋಮೀಟರ್ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಯ ಶವಾಗಾರಕ್ಕೆ ಸಾಗಿಸಿ, ಸಂಚಾರ ಸುಗಮಗೊಳಿಸಲು ಹರಸಾಹಸಪಟ್ಟರು.
ಇದೇ ಸ್ಥಳದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದನ್ನು ಖಂಡಿಸಿ ಸ್ಥಳೀಯರು ಕೆಲ ಕಾಲ ಆದಿಯೋಗಿ ಕಡೆಗೆ ತೆರಳುವ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈಶಾ ಫೌಂಡೇಶನ್ ವತಿಯಿಂದ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಘಟನೆ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.