Saturday, 27th July 2024

15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್

ಬೆಂಗಳೂರು : ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಬಸವೇಶ್ವರ ನಗರ, ಯಲಹಂಕ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬೆದರಿಕೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಶುರುವಾಗಿದೆ.

ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆತಂಕಕರು ‘ ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಮೇಲ್ ಬಗ್ಗೆ ಮಾಹಿತಿ ಕಲೆಹಾಕಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಹಿನ್ನೆಲೆ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಬಾಂಬ್ ಬೆದರಿಕೆ ಸಂದೇಶದಲ್ಲಿ ಇಸ್ಲಾಂ ಮತಾಂತರಕ್ಕೆ ಒತ್ತಾಯಿಸಲಾಗಿದೆ ಎಂದು ತಿಳಿದು ಬಂದಿದೆ. ಬಸವೇಶ್ವರ ನಗರ, ಸದಾಶಿವನಗರ ಸೇರಿದಂತೆ ಬೆಂಗಳೂರಿನ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್‌ಗಳು ಬಂದಿವೆ.

ಈ ಮೇಲ್‌ ನಲ್ಲಿ ‘ನೀವು ಇಸ್ಲಾಂ ವಿರೋಧಿಗಳು, ಅಲ್ಲಾನನ್ನು ವಿರೋಧಿಸುತ್ತೀರಿ, ಮತಾಂತರವಾಗಿ, ಇಲ್ಲವಾದರೆ ಸಾಯಿರಿ. ನಿಮ್ಮನ್ನು ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ‘ ಎಂದು ಉಲ್ಲೇಖಿಸಲಾಗಿದೆ.

ಶುಕ್ರವಾರ ಈ ಇ-ಮೇಲ್‌ಗಳನ್ನು ನೋಡುತ್ತಿದ್ದಂತೆ ಅಲರ್ಟ್‌ ಆದ ಶಾಲಾ ಮಂಡಳಿಗಳು ಮಕ್ಕಳ ಪೋಷಕರಿಗೆ ಸಂದೇಶ ರವಾನಿಸಿದ್ದಾರೆ. ಕೂಡಲೇ ಶಾಲೆಗಳಿಗೆ ಬಂದ ಪೋಷಕರು ಭಯದಿಂದ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖುದ್ದು ಭೇಟಿ ನೀಡಿ ಧರ್ಯೈ ತುಂಬಿದ್ದಾರೆ.

ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದರು.

ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ಕ್ವಾಡ‌ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು. ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು.

ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವು ಇದೇ ರೀತಿ ಕರೆ ಬಂದಿತ್ತು ಎನ್ನಲಾ ಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ಮಕ್ಕಳನ್ನ ಕೊಲ್ಲುವ ಬೆದರಿಕೆ ಬಂದಿದೆ. ನಾವು ಎಲ್ಲಿಂದ ಇಮೇಲ್ ಬಂದಿದೆ ಎಂದು ಪರಿಶೀಲನೆ ಮಾಡುತ್ತಿದ್ದೇವೆ. ಬಾಂಬ್ ಇಡಲಾಗಿದೆಯೇ ಎನ್ನುವ ಕುರಿತು ತಪಾಸಣೆ ನಡೆಸಲಾಗುತ್ತಿದೆ. ಇದರ ಹಿಂದೆ ಇಂಡಿಯನ್ ಮುಜಾಹಿದ್ದ್ ಕೈವಾಡವಿದೆಯೇ ಎನ್ನುವ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮತಾಂತರ ವಿಚಾರದಲ್ಲಿ ಮಾತನಾಡಿರುವ ಭಯೋತ್ಪಾದಕರು ಮತಾಂತರ ಆಗಿ ಎನ್ನುವ ಸಂದೇಶ ಕೊಟ್ಟಿದ್ದಾರೆ. ಕಳೆದ ವರ್ಷವೂ ಈ ರೀತಿ ಬೆದರಿಕೆ ಬಂದಿತ್ತು. ಏನು ಕ್ರಮ ಮಾಡಬೇಕು ಅದನು ಮಾಡುತ್ತಿದ್ದೇವೆ. ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಮಧ್ಯಾಹ್ನದ ಬಳಿಕ ಅಧಿಕಾರಿಗಳ ಸಭೆ ನಡೆಸುತ್ತೇನೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!