Thursday, 19th September 2024

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ನಿಧನ

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ (69) ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು.

ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು. ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನ ರಾಗಿದ್ದಾರೆ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

ನೇತ್ರತಜ್ಞ, ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಡಾ.ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖ ವಾಯಿತು. ನೇತ್ರದಾನದ ಬಗ್ಗೆ ಜನರಲ್ಲಿ ಅಪಾರ ಅರಿವು ಮೂಡಿಸಿದ್ದ ಅವರು, ಅನೇಕರ ಬಾಳಿಗೆ ಬೆಳಕಾಗಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರು ಸಹ ಸಂತಾಪ ಸೂಚಿಸಿದ್ದಾರೆ.