ಬೆಂಗಳೂರು: ಕಾಯ್ದೆಯ ವಿರುದ್ಧ ಕಳೆದ ಒಂದು ವರ್ಷದಿಂದ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಲೇ ಇದ್ದಾರೆ. ಹರಿಯಾಣ-ಪಂಜಾಬ್ ರೈತರ ಹೋರಾಟ ಸದ್ಯಕ್ಕಂತೂ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲೂ ಭಾರೀ ಹೋರಾಟ ನಡೆದಿತ್ತು. ಆದರೂ ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸದೆ ಒಪ್ಪಿಕೊಂಡಿದೆ. ಹೀಗಾಗಿ ಕೇಂದ್ರದ ಕೃಷಿ ನೀತಿ ವಿರುದ್ಧ ರಾಜ್ಯದ ರೈತರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆಯೂ ವರದಿಯಾಗಿದೆ.
ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಯನ್ನು ಸಂಸತ್ನಲ್ಲಿ ಮಂಡಿಸಿ ಅದಕ್ಕೆ ಒಪ್ಪಿಗೆ ಪಡೆದು ಇದೇ ತಿಂಗಳ ಸೆ.17ಕ್ಕೆ ಒಂದು ವರ್ಷವಾಗಲಿದೆ.
ವಿಧಾನಮಂಡಲ ಅಧಿವೇಶನದ ದಿನಾಂಕ ಘೋಷಣೆಯಾಗುತ್ತಿದ್ದಂತೆ, ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಂಬಂಧ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು. ರ್ಯಾಲಿಯಲ್ಲಿ ನೂತನ ಕೃಷಿ ನೀತಿಯನ್ನ ವಾಪಸ್ ಪಡೆಯುವಂತೆ ರೈತರು ಘೋಷಣೆ ಕೂಗಿದರು. ಭಾರತ ಸರ್ಕಾರ ಸುಗ್ರಿವಾಜ್ಞೆಯನ್ನು ಹೊರಡಿಸಿ ರೈತ ವಿರೋದಿ ಕಾನೂನುಗಳನ್ನ ಜಾರಿ ಮಾಡಿದೆ ಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಿದೆ. ರೈತ ವಿರೋಧಿ ಕಾನೂನುಗಳನ್ನ ವಾಪಾಸ್ ಪಡೆಯಬೇಕು ಎಂದು ಹಕ್ಕೊತ್ತಾಯ ವನ್ನು ಮುಂದಿಟ್ಟಿರುವ ಹೋರಾಟಗಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅಣತಿಯಂತೆ ಎಲ್ಲಾ ಹೋರಾಟಗಾರರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ಧಾರೆ.