ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಲು ಬುಧವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ನಂತರ ಪಕ್ಷದ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಸಭೆ ನಡೆಸಲಿದ್ದಾರೆನ್ನಲಾಗಿದೆ. ನಂತರ ಗುರುವಾರ ಹಾಗೂ ಶುಕ್ರವಾರ ಎಲ್ಲ ಸಚಿವರು ಹಾಗೂ ಶಾಸಕರಿಂದ ವೈಯಕ್ತಿಕ ಅಭಿಪ್ರಾಯ ಆಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕಳೆದ ಒಂದು ತಿಂಗಳಿನಿಂದ ಜೋರಾಗಿತ್ತು. ನಾಯಕತ್ವ ಬದಲಾವಣೆ ಕೂಗಿಗೆ ಬ್ರೇಕ್ ಹಾಕಲು ರಾಜ್ಯ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿಕೊಡುತ್ತಿದೆ. ಆ ಮೂಲಕ ಭಿನ್ನಮತೀಯರಿಗೆ ಸ್ಪಷ್ಟನೆ ಜೊತೆಗೆ ಎಚ್ಚರಿಕೆಯನ್ನೂ ನೀಡಬಹುದು.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿರಲಿದ್ದು, ಎಲ್ಲ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹಿ ಸಂಗ್ರಹದ ಬಗ್ಗೆಯೂ ಚರ್ಚೆ ನಡೆಯಲಿದೆ.
ಅಷ್ಟೇ ಅಲ್ಲದೆ ರಾಜ್ಯ ಆರೋಗ್ಯ ಇಲಾಖೆ ಸಚಿವ ಕೆ. ಸುಧಾಕರ್ರಿಂದ ರಾಜ್ಯದ ಕರೋನಾ ಪರಿಸ್ಥಿತಿ ಕುರಿತು ಮಾಹಿತಿ ಪಡೆಯ ಲಿದ್ದಾರೆ ಎನ್ನಲಾಗಿದೆ.