ವಿಶೇಷ ವರದಿ: ರಂಜಿತ್ ಎಚ್.ಅಶ್ವತ್ಥ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕರು, ಏಕಾಏಕಿ ಜೆಡಿಎಸ್ಗೆ ಬಿಟ್ಟು ಕೊಡಲು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಡಿದ ಆ ಒಂದು ಕರೆಯೇ ಕಾರಣ ಎಂದು ತಿಳಿದು ಬಂದಿದೆ.
ಹೌದು, ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಬಿಟ್ಟುಕೊಡುವ ಮನಸ್ಸು ಮಾಡುವುದಕ್ಕೆ ಸ್ವತಃ ಪ್ರಧಾನಿ ಮೋದಿ ಅವರ ಸೂಚನೆಯೇ ಕಾರಣವೆಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್ನ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಕೆಳಗಿಳಿಸಿ ಸಭಾಪತಿ ಸ್ಥಾನದ ಮೇಲೆ ಕೂರಲು ಬಿಜೆಪಿ ತಂತ್ರ ರೂಪಿಸಿತ್ತು. ಇದಕ್ಕೆ ಜೆಡಿಎಸ್ ಬೆಂಬಲ ಅಗತ್ಯವಿರುವುದರಿಂದ ಅವರಿಗೆ ಉಪಸಭಾಪತಿ ಸ್ಥಾನ ನೀಡಲು ಸಮ್ಮತಿಸಿದ್ದರು. ಆದರೆ ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಜೆಡಿಎಸ್, ಈ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಬಸವರಾಜ ಹೊರಟ್ಟಿ ಅವರು
ಭಾರತೀಯ ಇತಿಹಾಸದಲ್ಲಿ ಅತಿಹೆಚ್ಚು ವರ್ಷ ಪರಿಷತ್ನಲ್ಲಿರುವ ದಾಖಲೆಯನ್ನು ಹೊಂದಿದ್ದಾರೆ. ಆದ್ದರಿಂದ ಅವರ ಹಿರಿತನಕ್ಕೆ ಬೆಲೆ ಕೊಟ್ಟು ಅವರಿಗೆ ಈ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇವೇಗೌಡರ ಈ ಮನವಿಯನ್ನು ಪರಿಗಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುವಂತೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸೂಚನೆ ನೀಡಿದ್ದಾರೆ. ಬಳಿಕ ಹೊರಟ್ಟಿ ಅವರಿಗೆ ಸ್ಥಾನ ನೀಡುವುದು ಸೂಕ್ತ ಎನ್ನುವುದು ಮನವರಿಕೆಯಾಗಿದ್ದರಿಂದ ಜೆಡಿಎಸ್ಗೆ ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.