ಮಂಡ್ಯ: ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಹಾಗೂ ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ಕೋವಿಡ್-19 ಬಗ್ಗೆ ಅರಿವು ಮೂಡಿಸಲು ಸೈಕ್ಲೋಥಾನ್ ಆಯೋಜಿಸಲಾಗಿತ್ತು.
ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ಸೈಕ್ಲೋಥಾನ್ಗೆ ಚಾಲನೆ ನೀಡಿ ಮಾತನಾಡಿ, ಕಳೆದ ಏಳೆಂಟು ತಿಂಗಳಿನಿಂದ ಇಡೀ ವಿಶ್ವವನ್ನು ಕಂಗೆಡಿಸಿರುವ ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿನೂತನ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರದ ಸಲಹೆ, ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆ ಮೂಲಕ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಸಹಕಾರ ನೀಡ ಬೇಕು ಎಂದು ಮನವಿ ಮಾಡಿದರು.
ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾದ ಸೈಕ್ಲೋಥಾನ್ ಬನ್ನೂರು ರಸ್ತೆ, ನೂರಡಿ ರಸ್ತೆ, ಅಶೋಕನಗರ 2ನೇ ಮುಖ್ಯರಸ್ತೆ ಮೂಲಕ ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಪ್ರವಾಸಿ ಮಂದಿರ ರಸ್ತೆಯಲ್ಲಿ ಮತ್ತೆ ಕಾಲೇಜಿನಲ್ಲಿ ಅಂತ್ಯ ಗೊಂಡಿತು. ಸುಮಾರು 500ಕ್ಕೂ ಹೆಚ್ಚು ಮಂದಿ ಸೈಕ್ಲೋಥಾನ್ನಲ್ಲಿ ಪಾಲ್ಗೊಂಡಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಪಿ.ರವೀಂದ್ರ, ಡೀನ್ ಡಾ.ಬಿ.ಎಸ್.ಶಿವಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅನಂತ ಪದ್ಮನಾಭ ಪ್ರಭು, ಜೈವಿಕ ಇಂಧನದ ಮುಖ್ಯಸ್ಥ ಡಾ.ಪ್ರಸನ್ನಕುಮಾರ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ದೇವೇಗೌಡ, ಎನ್ಎಸ್ಎಸ್ ಅಧಿಕಾರಿ ಡಾ.ರೇವಣ್ಣೇಶ್ ಇತರರು ಭಾಗವಹಿಸಿದ್ದರು.