ದಾವಣಗೆರೆ: ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮೇ.24 ರಿಂದ ಮೇ 31ರವರೆಗೆ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದೆ.
ಎಲ್ಲಾ ಅಂಗಡಿ ಮುಂಗಟ್ಟುಗಳು, ಮದ್ಯದಂಗಡಿ, ಬಾರ್ ಅಂಡ್ ರೆಸ್ಟೋರೆಂಟ್, ದಿನಸಿ ಅಂಗಡಿಗಳು ಮುಚ್ಚಲು ಆದೇಶ ನೀಡಲಾಗಿದೆ. ಯಾವುದೇ ವಾಹನಗಳ ಸಂಚಾರಕ್ಕೂ ಅನುಮತಿ ಇಲ್ಲ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ತರಲು ನಡೆದುಕೊಂಡೇ ಹೋಗಬೇಕು. ಮದುವೆ ಸಮಾರಂಭಕ್ಕೆ ಕೇವಲ 10 ಜನರು, ಅಂತ್ಯಸಂಸ್ಕಾರಕ್ಕೆ ಕೇವಲ 5 ಜನರಿಗೆ ಮಾತ್ರ ಅವಕಾಶ ಕೊಡಲಾಗಿದೆ.
ಹೊಟೇಲ್, ರೆಸ್ಟೋರೆಂಟ್ ಹಾಗೂ ಉಪಾಹಾರ ಗೃಹಗಳು ಪಾರ್ಸಲ್ ಸೇವೆಯನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸ ಬೇಕು. ಯಾವುದೇ ರೀತಿಯ ಪಾರ್ಸೆಲ್ ಪಡೆಯಲು ಜನರು ಆಗಮಿಸುವಂತಿಲ್ಲ.
ಹೊರ ಜಿಲ್ಲೆಗಳಿಂದ ಬರುವವರು ಕಡ್ಡಾಯವಾಗಿ 14 ಹೋಂ ಕ್ವಾರಂಟೈನ್ನಲ್ಲಿರಬೇಕು. ಕೃಷಿ ಸಂಬಂಧಿತ ಚಟುವಟಿಕೆ, ಕ್ಲಿನಿಕ್, ಮೆಡಿಕಲ್ ಶಾಪ್ ಸೇರಿದಂತೆ ಅಗತ್ಯ ವಸ್ತುಗಳ ವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ಕೋವಿಡ್ ನಿಯಮಾವಳಿ ಪಾಲಿಸದಿದ್ದರೆ ಕಟ್ಟುನಿಟ್ಟಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಎಚ್ಚರಿಕೆ ನೀಡಿದ್ದಾರೆ. ಮೇ 23ರ ವರದಿಯಂತೆ ದಾವಣಗೆರೆ ಜಿಲ್ಲೆಯಲ್ಲಿ 363 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.