Thursday, 19th September 2024

Dr G Parameshwar: ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ, ಸ್ಥಳ ಪರಿಶೀಲಿಸಿದ ಸಚಿವ ಪರಮೇಶ್ವರ್ 

ತುಮಕೂರು/ಮಧುಗಿರಿ:  ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಸೂಚಿಸಿದರು.

ಬಳಿಕ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದರು. ಧೈರ್ಯ ತೆಗೆದುಕೊಳ್ಳುವಂತೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಘಟನೆಗೆ ಮರುಕ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿ, ಕಾರುಗಳು ಅಪಘಾತ ಸಂಭವಿಸಿದ ರಸ್ತೆ ನೇರವಾಗಿದೆ. ಈ ಘಟನೆ ನಡೆದಿರುವುದು ಅಚ್ಚರಿ ಮೂಡಿಸಿದೆ. ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸುವ ಶಕ್ತಿ ನೀಡಲಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಚಾಲಕರಿಗೆ ತಿಳಿವಳಿಕೆ 

ರಸ್ತೆಗಳು ಚೆನ್ನಾಗಿರುವುದರಿಂದ ಸ್ವಾಭಾವಿಕವಾಗಿ ವಾಹನಗಳು ವೇಗವಾಗಿ ಚಲಿಸುತ್ತಿವೆ. ಮೈಸೂರು ರಸ್ತೆಯಲ್ಲಿ ಎಐ ಆಧರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚಿನ ವೇಗದಲ್ಲಿ ಹೋಗುವ ವಾಹನಗಳನ್ನು ಗುರುತಿಸಿ ದಂಡ ವಿಧಿಸಲಾಗುತ್ತಿದೆ. ಅದೇರೀತಿ, ರಾಜ್ಯ ಹೆದ್ದಾರಿಗಳಲ್ಲಿ ಕೈಗೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಯುತ್ತಿದೆ. ಸಾರಿಗೆ ಇಲಾಖೆಯೊಂದಿಗೆ ಕೈಜೋಡಿಸಿ ವಾಹನ ಚಾಲಕರಿಗೆ ತಿಳಿವಳಿಕೆ ಮೂಡಿಸುವ ಕಾರ್ಯವನ್ನು ಮಾಡಲಾಗು ವುದು ಎಂದು ಹೇಳಿದರು.

ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಲಾಭು ರಾಮ್  ಆಗಮಿಸಿದ್ದಾರೆ. ಘಟನೆಗೆ ನಿಖರವಾದ ಕಾರಣವೇನು? ಇಂತಹ ಘಟನೆಗಳು ಮರುಕಳಿಸದಂತೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಅಪಘಾತ ವಲಯ ಗುರುತಿಸಲು ಕ್ರಮ 

ರಾಜ್ಯದಲ್ಲಿ ಅಪಘಾತ ನಿಯಂತ್ರಿಸಲು ಇಲಾಖೆಯ ಅನುದಾನವನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸ ಲಾಗಿದೆ. ಅಪಘಾತ ವಲಯ, ರಸ್ತೆ ತಿರುವುಗಳನ್ನು ಗುರುತಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಮೈಸೂರು ಹೆದ್ದಾರಿಯಲ್ಲಿ ಕಳೆದ ವರ್ಷ, ನಾಲ್ಕು ತಿಂಗಳ ಅವಧಿಯಲ್ಲಿ ನೂರಕ್ಕು ಹೆಚ್ಚು ಜನ ಮೃತಪಟ್ಟಿದ್ದರು. ಈಗ ಕ್ರಮ ತೆಗೆದುಕೊಂಡ ಬಳಿಕ ಅಪಘಾತ ಇಳಿಕೆಯಾಗಿದೆ. ಅಪಘಾತದಿಂದ ಸಾವನ್ನಪ್ಪುವ ಪ್ರಮಾಣ ಕಡಿಮೆಯಾಗಿದೆ. ರಸ್ತೆ ಸುರಕ್ಷತಾ ಕ್ರಮಕೈಗೊಳ್ಳಲು ನೂರು ಕೋಟಿ ರೂ. ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಕೇಂದ್ರ ವಲಯ ಐಜಿಪಿ ಲಾಭು ರಾಮ್, ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ ಅವರು ಇದ್ದರು.