Friday, 25th October 2024

ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ಸಚಿವ ಹೆಚ್ ಕೆ ಪಾಟೀಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸಚಿವ ಶಿವರಾಜ ತಂಡರಗಿಯನ್ನು 11 ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿತ್ತು. ಈ ಬೆನ್ನಲ್ಲೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ.

ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋ ದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಬೆಂಗಳೂರಿನ ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಡರಗಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸೇರಿದಂತೆ 11 ನಿಗಮಗಳ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಿದೆ.