Thursday, 19th September 2024

Minister Dr M C Sudhakar: ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಂದ ಉದ್ದೇಶಿತ ಹೂ ಮಾರುಕಟ್ಟೆ ನಿರ್ಮಾಣದ ಜಾಗ ಪರಿಶೀಲನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ೨೦೦ ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳ ಸುಸಜ್ಜಿತ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಯಲುವಳ್ಳಿ ಗ್ರಾಮದ ಬಳಿ ಇರುವ ತೋಟಗಾರಿಕೆ ಇಲಾಖೆಯ ಉದ್ದೇಶಿತ ಹೂ ಮಾರುಕಟ್ಟೆ ನಿರ್ಮಾಣದ ಜಾಗ ಪರಿಶೀಲನೆ ಮಾಡಿದ ನಂತರ ಸೋಮವಾರ ರೈತರೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಬಜೆಟ್‌ನಲ್ಲಿ ಜಿಲ್ಲೆಯ ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಘೋಷಣೆ ಮಾಡಲಾಗಿತ್ತು. ಆದರೆ, ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಮಾರು ಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾ ರಕ್ಕೆ ಸಲ್ಲಿಸಲಾಗಿತ್ತು.

ಈ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, 75 ಕೋಟಿ ರೂಪಾಯಿಗಳನ್ನು ನಬಾರ್ಡ್ ನೆರವಿನಿಂದ  ಹಾಗೂ 125 ಕೋಟಿ ರೂಪಾಯಿಗಳನ್ನು ಸರ್ಕಾರದಿಂದ ಭರಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಆರ್ಥಿಕ ಇಲಾಖೆಯೂ ಒಪ್ಪಿಗೆ ನೀಡಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಕಾಮಗಾರಿ ಪೂರ್ಣಗೊಂಡು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ತಹಸೀಲ್ದಾರ್ ಅನಿಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಗಾಯಿತ್ರಿ,ರೈತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಸಚಿವರು ಜಿಲ್ಲೆಯ ಹೂ ಬೆಳೆಗಾರರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿ ಹೂ ಮಾರುಕಟ್ಟೆ ನಿರ್ಮಾಣದ ಕುರಿತು ಅಭಿಪ್ರಾಯ ಸಂಗ್ರಹಿಸಿದರು.