Sunday, 27th October 2024

Minister Dr M C Sudhakar: ದೇಶ ಕಟ್ಟುವಂತಹ ಕಾರ್ಯ ಶಿಕ್ಷಕರಿಂದಾಗ ಬೇಕು-ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಮತ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಡಿಜಿಟಲ್ ಬೋರ್ಡ್, ಸ್ಮಾರ್ಟ್ ಟಿವಿ ಮತ್ತಿತರ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಸ್ವಯಂ ಸೇವಾ ಸಂಸ್ಥೆ ಗಳು ಹಾಗೂ ವಿವಿಧ ಕಂಪನಿಗಳು, ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ನಗರ ಹೊರವಲಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ವಿವಿಧ ಕಂಪನಿಗಳು,ಕೈಗಾರಿಕೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ೨ ಸಾವಿರ ಕೋಟಿ ರೂಪಾಯಿಗಳ ಒಡಂಬಡಿಕೆ ಮಾಡಿಕೊಂಡಿದೆ. ಅಲ್ಲದೇ, ಪ್ರೌಢಶಾಲಾ ಹಂತದಿಂದಲೇ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳಿಗೆ ಪೂರಕವಾಗುವಂತೆ ಪ್ರತ್ಯೇಕ ಪಠ್ಯ ಕ್ರಮವನ್ನು ಪರಿಚಯಿಸಲು ಸಿದ್ದತೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ ಎಂದರು.

ಜಿಲ್ಲೆಯ 26 ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಸ್ಮಾರ್ಟ್ ಆಗಿಸಲು ಬೆಂಗಳೂರಿನ ರೋಟರಿ ಸಂಸ್ಥೆ ಮುಂದಾಗಿದೆ. ಇತ್ತೀಗಷ್ಟೇ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ್ದು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಬೋಧಕೇತರ ಸಿಬ್ಬಂದಿ ನೇರ ನೇಮಕಾತಿಗೂ ಆದೇಶ ಹೊರಡಿಸಿದೆ. ರಾಜ್ಯದ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಇದ್ದು, ಬೇಡಿಕೆಯೂ ಹೆಚ್ಚಾಗಿರುವುದರಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಸರ್ಕಾರಕ್ಕಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗಗಳ ಶೈಕ್ಷಣಿಕ ಪ್ರಗತಿಗೆ ಮತ್ತು ಸಬಲೀಕರಣಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದರು.

ಸುಸ್ಥಿರ ದೇಶವನ್ನು, ಸಮಾಜ ಕಟ್ಟುವಂತಹ ಮುಖ್ಯ ಕೆಲಸ ಶಿಕ್ಷಕರ ಮೇಲಿದೆ. ಎಲ್ಲಾ ವೃತ್ತಿಗಿಂತ ಶಿಕ್ಷಕರ ವೃತ್ತಿಗೆ ಸಮಾಜದಲ್ಲಿ ಅಪಾರವಾದ ಗೌರವವಿದೆ. ಆ ಗೌರವ, ವೃತ್ತಿ ಧರ್ಮ, ಗುರು ಸಂಹಿತೆಯನ್ನು ಎಲ್ಲರೂ ಪಾಲಿಸು ವಂತಹ ಶಿಕ್ಷಕರು, ಉಪನ್ಯಾಸಕರು ನೀವಾಗಬೇಕು. ಮಕ್ಕಳಿಗೆ ತಂದೆ ತಾಯಿಯ ನಂತರ ಶಿಕ್ಷಕರೇ ಹೆಚ್ಚು ಸಂಪರ್ಕಿತ ರಾಗಿರುತ್ತಾರೆ. ಜಿಲ್ಲೆಯಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಕಳಪೆಯಾಗುತ್ತಿದೆ. ಅದ್ದದರಿಂದ ಶಿಕ್ಷಕರು ಗುಣ ಮಟ್ಟದ ಫಲಿತಾಂಶವನ್ನು ಉತ್ತಮ ಪಡಿಸಲು ಹೆಚ್ಚು ಶ್ರಮವಹಿಸಬೇಕು, ಜೊತೆ ಜೊತೆಗೆ  ಮೌಲ್ಯಯುತ ಶಿಕ್ಷಣ ನೀಡಬೇಕು.ತಮ್ಮ ವೃತ್ತಿ ಧರ್ಮ ಪಾಲಿಸಿ ತಮ್ಮ ವೃತ್ತಿಯ ಬಗ್ಗೆ ಹೆಮ್ಮೆಪಡಬೇಕು. ಸುಸ್ಥಿರ ದೇಶ, ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಮಾಜದಲ್ಲಿ ಎಲ್ಲರಿಗೆ ಶಿಕ್ಷಣ ದೊರೆತರೆ ಇತರೆ ಸಮಸ್ಯೆ ಗಳನ್ನು ಪರಿಹರಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ,ನಾನು ಸಹ ಶಿಕ್ಷಕ ವೃತ್ತಿಯಿಂದಲೇ ಜೀವನವನ್ನು ವೃದ್ಧಿಸಿ ಕೊಂಡ ವನು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪೋಷಕರು ಹೆಚ್ಚು ಶ್ರಮವಹಿಸುತ್ತಾರೆ.ಶಿಕ್ಷಕರು ಮಕ್ಕಳಲ್ಲಿ ಜ್ಞಾನವನ್ನು ಗುರುತಿಸುವ ಕಾರ್ಯವಾಗಬೇಕು. ತಮ್ಮ ಮಕ್ಕಳಿಗೆ ಉತ್ತಮವಾದ ನಿರ್ಧಾರ ತೆಗೆದು ಕೊಳ್ಳಲು ಸ್ವಾತಂತ್ರ‍್ಯ ವನ್ನು ಪೋಷಕರು ನೀಡಬೇಕು ಎಂದು ಎಲ್ಲಾ ಶಿಕ್ಷಕ ವರ್ಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಶಿಕ್ಷಕರನ್ನು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು(ಪಟ್ಟಿಯನ್ನು ಸುದ್ದಿಯೊಂದಿಗೆ ಲಗತ್ತಿಸಿದೆ). ಈ ವೇಳೆ ಮಾಜಿ ರಾಷ್ಟ್ರಪತಿ ಹಾಗೂ ತತ್ವಶಾಸ್ತ್ರಜ್ಞ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವ ಚಿತ್ರ ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಸಾಕ್ಷರತಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಉಪನಿರ್ದೇಶಕ (ಅಭಿವೃದ್ಧಿ) ಮುನಿಕೆಂಪೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಶಶಿಧರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ನಾರಾ ಯಣ ಸ್ವಾಮಿ, ರೋಟರಿ ಕ್ಲಬ್ ನ ಗೌರ್ನರ್ ಮಹದೇವ ಪ್ರಸಾದ್, ಸುಂದರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಪೆರೇಸಂದ್ರ ಎಂ.ವಿ.ಎಸ್.ಶಾಲೆಯ  ನಾಗಭೂಷಣ್, ಪದಾಧಿಕಾರಿಗಳು, ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ನಿವೃತ್ತ ಶಿಕ್ಷಕರು, ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.