Friday, 25th October 2024

ದೇಶದ ಐಕ್ಯತೆಗೆ ರಾಜೀವ್ ಗಾಂಧಿ ಜೀವನ ಮೀಸಲು: ಪಾಟೀಲ್

ರಾಜೀವ್ ಗಾಂಧಿ ಪುಣ್ಯ ಸ್ಮರಣೆ

ಕಲಬುರಗಿ: ರಾಜೀವ್ ಗಾಂಧಿ ದೇಶದ ಪ್ರಧಾನಿಯಾಗಿ, ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದರು. ಅವರು  ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ  ಅವರ ಪುಣ್ಯ ಸ್ಮರಣೆಯ ನಿಮಿತ್ಯ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು, ರಾಜೀವ್ ಗಾಂಧಿಯವರು 18 ವರ್ಷದ ಯುವಕರಿಗೆ ಮತದಾನದ ಹಕ್ಕು ಕಲ್ಪಿಸುವ ಮೂಲಕ ಯುವಕರಲ್ಲಿ ವಿಶ್ವಾಸ ಮೂಡಿಸಿದರು. ದೇಶದಲ್ಲಿ ಸಾಮಾನ್ಯ ವ್ಯಕ್ತಿಯು ಮೊಬೈಲ್ ಬಳಕೆ ಮಾಡುವ ನಿಟ್ಟಿನಲ್ಲಿ, ಐಟಿ ಕ್ರಾಂತಿ ಮಾಡಿದ್ದರು. ತಂತ್ರಜ್ಞಾನ ಕ್ಷೇತ್ರ ಎತ್ತರಕ್ಕೆ ಬೆಳೆಯಲು ಭದ್ರ ಬುನಾದಿ ಹಾಕಿದರು. ಸಂವಿಧಾನದ 73, 74ನೇ ತಿದ್ದುಪಡಿ ತಂದು ಪಂಚಾಯತ್ ರಾಜ್ ವ್ಯವಸ್ಥೆಗೆ ಶಾಶ್ವತ, ಸಂವಿಧಾನಾತ್ಮಕ ಮಾನ್ಯತೆ ಕಲ್ಪಿಸುವಲ್ಲಿ ರಾಜೀವ್ ಗಾಂಧಿ ಪಾತ್ರ ಅಪಾರ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಜಗದೇವ ಗುತ್ತೇದಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ್ ಮೋದಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಲತಾ ರಾತೋಡ್,  ಅಲಾಂಖಾನ್, ರೇಣುಕಾ ಸಿಂಗೆ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.