– ಶಿಕ್ಷಕ, ಉಪನ್ಯಾಸಕರಿಗೆ ಉಚಿತ ಕೋವಿಡ್ ಲಸಿಕೆ
ಕೊಪ್ಪಳ: ಕೋವಿಡ್ ನಿಯಂತ್ರಣದಲ್ಲಿ ಶಿಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದು, ಅವರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಅದಕ್ಕಾಗಿ ಆದ್ಯತೆ ಮೇರೆಗೆ ಉಚಿತ ಕೋವಿಡ್-೧೯ ಲಸಿಕೆ ಹಾಕಲಾಗುತ್ತಿದ್ದು, ಲಸಿಕೆ ಪಡೆದ ಶಿಕ್ಷಕರು ಜನರಲ್ಲಿ ಲಸಿಕೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಈಶಾನ್ಯ ಕರ್ನಾಟಕ ಶಿಕ್ಷಕರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆಯೋ ಜಿಸಿದ್ದ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಉಚಿತ ಕೋವಿಡ್-೧೯ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ದರು.
ಕೋವಿಡ್ ಮೂರನೇ ಅಲೆ ಎದುರಿಸಲು ನಾವೆಲ್ಲರೂ ಸಿದ್ಧರಾಗಬೇಕಾಗಿದೆ. ಶಿಕ್ಷಕರಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆ ಇರುವ ಬಗ್ಗೆ ತಜ್ಞರು ಅಭಿಪ್ರಾಯ ಪಟ್ಟಿರುವ ಕಾರಣ ಮಕ್ಕಳಿಗೆ ಹಾಗೂ ಪೋಷಕರಿಗೆ ಸುರಕ್ಷತಾ ಕ್ರಮಗಳನ್ನು ವಹಿಸುವಂತೆ ಸೂಕ್ತ ತಿಳಿವಳಿಕೆ ನೀಡಬೇಕು. ಹಳ್ಳಿಗಳಿಗೆ ತೆರಳಿ, ಜಾಗೃತಿ ಮೂಡಿಸುವ ಮೂಲಕ ಮಕ್ಕಳನ್ನು ರಕ್ಷಿಸಬೇಕು ಎಂದು ಅವರು ಶಿಕ್ಷಕರಿಗೆ ಸಲಹೆ ನೀಡಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಪ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿ ಸಿದ್ದು, ಅವರಿಗೆ ಕೋವಿಡ್ ಲಸಿಕೆ ಹಾಕಿಸಲಾಗುತ್ತಿದೆ. ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಚುನಾವಣೆ, ಕೋವಿಡ್ ಕರ್ತವ್ಯ ಸೇರಿದಂತೆ ಇತರೆ ಎಲ್ಲ ಕೆಲಸಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಸುಕ್ಷತೆ ದೃಷ್ಠಿಯಿಂದ ಎಲ್ಲ ಶಿಕ್ಷಕರು ಲಸಿಕೆ ಹಾಕಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಲಸಿಕಾ ಕಾರ್ಯಕ್ರಮದಲ್ಲಿ ೮೦೦ ಶಿಕ್ಷಕರಿಗೆ ಲಸಿಕೆ ನೀಡಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭು ಲಿಂಗನಗೌಡ ಪಾಟೀಲ್ ಹಲಗೇರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಅಮರೇಗೌಡ ಬಯ್ಯಾಪುರ, ಹಾಲಪ್ಪ ಆಚಾರ್, ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್ಪಿ ಟಿ. ಶ್ರೀಧರ, ಜಿಪಂ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ. ಲಿಂಗರಾಜು, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವನಗೌಡ ಪಾಟೀಲ್, ಬಿಇಒ ಉಮೇಶ ಪೂಜಾರಿ ಸೇರಿದಂತೆ ಇತರರು ಹಾಜರಿದ್ದರು.