ಬೆಂಗಳೂರು : ‘ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ’ ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂಬು ದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದಿದ್ದಾರೆ. 18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದಿದ್ದಾರೆ.
ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ ಎಂದು ಒತ್ತಾಯಿಸಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸು ತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದಿದ್ದಾರೆ.
ದೇಶದಾದ್ಯಂತ ಕೊರೋನಾ ಸೋಂಕಿತರು ಬೆಡ್, ಆಕ್ಸಿಜನ್, ಅಂಬುಲೆನ್ಸ್, ಔಷಧಿಗಳಿಲ್ಲದೆ ಪರದಾಡು ತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ- ರಾಜ್ಯ ಸರ್ಕಾರಗಳ ದಯನೀಯ ವೈಫಲ್ಯದ ಬಗ್ಗೆ ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು ಎಂದಿದ್ದಾರೆ.