ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ 'ಆರೋಗ್ಯ ಕವಚ' ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್ ನೌಕರರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಡೆಡ್ಲೈನ್ ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸೇವೆಗಳು ಸಂಪೂರ್ಣವಾಗಿ ಬಂದ್ ಆಗುವ ಸಾಧ್ಯತೆ ಹೆಚ್ಚಿದೆ.
ಯಾಕೆ ಈ ಪ್ರತಿಭಟನೆ?
'ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ' ಹಾಗೂ 'ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ'ದ ಪದಾಧಿಕಾರಿಗಳು ಆರೋಗ್ಯ ಸಚಿವರಿಗೆ ಅಧಿಕೃತ ಪತ್ರ ಬರೆದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಜಿವಿಕೆ ಗ್ರೀನ್ ಹೆಲ್ತ್ ಇಎಂಆರ್ಐ (GVK EMRI) ಸಂಸ್ಥೆಯ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 3,500 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, 2017 ರಿಂದ 2022 ರವರೆಗೆ ಯಾವುದೇ ವೇತನ ಪರಿಷ್ಕರಣೆ ಆಗಿಲ್ಲ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೌಕರರ ಪ್ರಮುಖ ಬೇಡಿಕೆಗಳೇನು?
ವೇತನ ಹೆಚ್ಚಳ: ಒಪ್ಪಂದದ ಪ್ರಕಾರ ಪ್ರತಿ ವರ್ಷ ನೌಕರರ ವೇತನವನ್ನು ಪರಿಷ್ಕರಿಸಬೇಕು.
ಏಕರೂಪ ವೇತನ ವ್ಯವಸ್ಥೆ: ವಲಯವಾರು ವಿಂಗಡಣೆಯನ್ನು ರದ್ದುಗೊಳಿಸಿ, ಜ್ಯೇಷ್ಠತೆ (Seniority) ಆಧಾರದ ಮೇಲೆ ಎಲ್ಲರಿಗೂ ಸಮಾನ ವೇತನ ನೀಡಬೇಕು.
ಸಮಯಕ್ಕೆ ಸರಿಯಾಗಿ ಪಾವತಿ: ಕಾರ್ಮಿಕ ಇಲಾಖೆಯ ನಿಯಮಾವಳಿಯಂತೆ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಸಿಗಬೇಕು.
ಮೂಲಸೌಕರ್ಯ: 3 ಶಿಫ್ಟ್ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಇದರೊಂದಿಗೆ ಎಲ್ಲಾ ಕಾರ್ಯಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಆಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಮಾಡಿಕೊಡಬೇಕು.
ಪರಿಹಾರ ಧನ: ಕರ್ತವ್ಯದ ಅವಧಿಯಲ್ಲಿ ಅಪಘಾತಕ್ಕೀಡಾಗಿ ಮೃತಪಡುವ ಸಿಬ್ಬಂದಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಧನ ನೀಡಬೇಕು.
ಬ್ಯಾಂಕ್ ವ್ಯವಹಾರ ಬೇಗ ಮುಗಿಸಿ; ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಡೆಯಲಿದೆ ಮುಷ್ಕರ
ಸಚಿವರಿಂದ ಎಚ್ಚರಿಕೆ
ಈ ಸಾಮೂಹಿಕ ರಾಜೀನಾಮೆ ಎಚ್ಚರಿಕೆಯ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸಿಬ್ಬಂದಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. "ಚಾಲಕರಿಗೆ ಸಮಸ್ಯೆಗಳಿದ್ದರೆ ಅವರು ಮೊದಲು ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಯೊಂದಿಗೆ ಮಾತನಾಡಬೇಕು. ಒಂದು ವೇಳೆ ಕಂಪನಿಗೆ ಸಿಬ್ಬಂದಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಟೆಂಡರ್ ರದ್ದುಪಡಿಸಿ ಬೇರೆ ಕಂಪನಿಗೆ ಜವಾಬ್ದಾರಿ ನೀಡಲಾಗುವುದು" ಎಂದಿದ್ದಾರೆ.