ಬಳ್ಳಾರಿ, ಫೆ.21: ಜಿಲ್ಲೆಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಮಹತ್ವ ಹೊಂದಿರುವ ಪ್ರಸಿದ್ಧ ಪ್ರವಾಸಿ ತಾಣವಾದ ಸಂಗನಕಲ್ಲಿನ ಹೀರೆಗುಡ್ಡಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಚಾರಣ ಮಾಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಂಗನಕಲ್ಲು ಬಳ್ಳಾರಿ ಜಿಲ್ಲೆಯ (Ballari News) ಅತ್ಯಂತ ಪ್ರಮುಖ ಐತಿಹಾಸಿಕ ತಾಣಗಳಲ್ಲಿ ಒಂದಾಗಿದ್ದು, ಸಾವಿರಾರು ವರ್ಷಗಳಿಗೂ ಹೆಚ್ಚು ಹಿಂದೆ ಈ ಕಲ್ಲಿನ ಬೆಟ್ಟಗಳಲ್ಲಿ ವಾಸಿಸುತ್ತಿದ್ದ ನವಶಿಲಾಯುಗದ ಮಾನವರ ಜೀವನದ ಅಪೂರ್ವ ನೋಟಗಳನ್ನು ನೀಡುತ್ತದೆ. ಇದರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಹಿರೇಗುಡ್ಡದ ಮೇಲ್ಭಾಗದಲ್ಲಿರುವ ಅಪರೂಪದ ಶಿಲಾ ಕೆತ್ತನೆಗಳು ಮತ್ತು ರೇಖಾಚಿತ್ರಗಳನ್ನು ವೀಕ್ಷಿಸಲಾಗಿದೆ. ಇವುಗಳು ನವಶಿಲಾಯುಗದ ಕಾಲಕ್ಕೆ ಸೇರಿವೆ ಎಂದು ಗುರುತಿಸಲಾಗಿದ್ದು, ಇವುಗಳ ಐತಿಹಾಸಿಕ ಪ್ರಾಮುಖ್ಯತೆಯನ್ನು ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ ಎಂದರು.
ಈ ತಾಣವನ್ನು ಪ್ರವಾಸಿ ಸ್ನೇಹಿಯಾಗಿಸಲು ಮತ್ತು ಇಲ್ಲಿನ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ಇಲ್ಲಿ ನಡೆದಿರುವ ವೈಜ್ಞಾನಿಕ ಸಂಶೋಧನೆಗಳು ನಮ್ಮ ಪೂರ್ವಜರ ಜೀವನಶೈಲಿ ಮತ್ತು ಇತಿಹಾಸದ ಮೇಲೆ ಬೆಳಕು ಚೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಹೇಳಿದರು.
ಜಿಲ್ಲಾಡಳಿತದಿಂದ ಈ ಭೇಟಿಯು ಸಂಗನಕಲ್ಲು ಪ್ರದೇಶವು ಮುಂದಿನ ದಿನಗಳಲ್ಲಿ ಪ್ರಮುಖ ಪ್ರವಾಸಿ ಕೇಂದ್ರವಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆಯಿದೆ ಎಂದರು.
ಅಭಿವೃದ್ಧಿಯ ಹೆಸರಿನಲ್ಲಿ ಯಾವುದೇ ಕೃತಕ ವಸ್ತುಗಳನ್ನು ಬಳಸದೆ, ಈ ತಾಣದ ನೈಸರ್ಗಿಕ ಪರಿಸರವನ್ನು ಹಾಗೆಯೇ ಉಳಿಸಿಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಲಾಗುವುದು. ಸಂಶೋಧಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾಣಕ್ಕೆ ತಲುಪಲು ಸುಸಜ್ಜಿತವಾದ ಕಾಲುದಾರಿ, ಮಾಹಿತಿ ಫಲಕಗಳು ಮತ್ತು ಅಗತ್ಯ ಮಾರ್ಗದರ್ಶನ ಸೌಲಭ್ಯಗಳನ್ನು ಒದಗಿಸಲು ಯೋಜಿಸಲಾಗುವುದು ಎಂದು ತಿಳಿಸಿದರು. ಈ ತಾಣವು ಈ ಹಿಂದೆ ಅಷ್ಟಾಗಿ ಬೆಳಕಿಗೆ ಬಂದಿರಲಿಲ್ಲ. ಸ್ಥಳ ಪರಿಶೀಲನೆಯು ಅತ್ಯಂತ ಅರ್ಥಪೂರ್ಣವಾಗಿದ್ದು, ಈ ಪ್ರದೇಶವನ್ನು ಮುಂದಿನ ದಿನಗಳಲ್ಲಿ ಯಾವ ರೀತಿ ಅಭಿವೃದ್ಧಿಪಡಿಸಬೇಕು ಮತ್ತು ಪ್ರವಾಸಿಗರನ್ನು ಹೇಗೆ ಆಕರ್ಷಿಸಬೇಕು ಎಂಬ ಯೋಜನೆ ರೂಪಿಸುವುದರ ಕುರಿತು ಒಂದು ಸ್ಪಷ್ಟವಾದ ಚಿತ್ರಣ ದೊರೆತಿದೆ.
ಮೂಲಭೂತ ಸೌಕರ್ಯಗಳ ಸದ್ಬಳಕೆ ಮತ್ತು ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ನೀಲಿನಕ್ಷೆ ಸಿದ್ಧಪಡಿಸಲಾಗುವುದು. ಈ ಕ್ರಮಗಳಿಂದಾಗಿ ಸ್ಥಳೀಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ ಸಿಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವಂತೆ ಹಾಗೂ ಇದಕ್ಕೆ ಅಗತ್ಯ ಸೌಲಭ್ಯ, ಸಹಕಾರ ಜಿಲ್ಲಾಡಳಿತದಿಂದ ಒದಗಿಸಲಾಗುವುದು ಎಂದು ಹೇಳಿದರು.
ಈ ಪ್ರದೇಶದಲ್ಲಿ ಸಂಶೋಧನೆ ನಡೆಸಿ ಇಲ್ಲಿನ ಐತಿಹಾಸಿಕ ಮಹತ್ವವನ್ನು ಪರಿಚಯಿಸಿದ ಇತಿಹಾಸ ತಜ್ಞ ಪ್ರೊ. ಕೋರಿಶೆಟ್ಟರ್, ಸದಸ್ಯ ಅಹಿರಾಜ್ ಮತ್ತು ಅವರ ತಂಡದ ಶ್ರಮವನ್ನು ಶ್ಲಾಘಿಸಿದರು.
ರಾಜ್ಯವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವುದೇ ನಮ್ಮ ಗುರಿ: ಎಚ್.ಕೆ. ಪಾಟೀಲ್
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಸಿಬ್ಬಂದಿ ಶ್ರೀಹರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.