ಬೆಳಗಾವಿ, ಡಿ.1: ಲಿಂಗಾಯತ ಮಠಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಕ್ಕೊಳಗಾಗಿದ್ದ ಕನ್ನೇರಿ ಶ್ರೀ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಬಾಗದ ಹನುಮ ಮಾಲಾ ದೀಕ್ಷಾ ಸಮಾರಂಭದಲ್ಲಿ ಮಾತನಾಡಿರುವ ಕೊಲ್ಲಾಪುರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, "ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು" ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದರೂ ತಪ್ಪು ಕೆಲಸ ಮಾಡಲು ಹೊರಟರೆ, ಅದು ನಮ್ಮನ್ನು ತಡೆಯುತ್ತದೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದರೂ ಮದ್ಯದಂಗಡಿ ಕಡೆ ಹೊರಟರೆ, ಕೊರಳಿನಲ್ಲಿರುವ ಪೊಲೀಸ್ ನಮ್ಮನ್ನು ತಡೆಯುತ್ತದೆ. ಮತ್ತೆ ಯಾರಾದರೂ ಅಡ್ಡೆಗೆ ಹೊರಟಿದ್ದರೆ, ನಾನು ಕೊರಳಲ್ಲಿ ಇದ್ದೇನೆ. ಬಾ ಈ ಕಡೆ ಎಂದು ಕರೆಯುತ್ತೆ. ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ಮತ್ತೊಮ್ಮೆ ವಿವಾದಾತ್ಮಕ ಪದ ಬಳಸಿದ್ದಾರೆ.
ಕೈಯಲ್ಲಿ ಕೋಲು ಹಿಡಿದು ಓಡಾಡುವುದನ್ನು ವಿರೋಧ ಮಾಡುತ್ತಾರೆ. ಕೋಲು ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಾ? ನಮ್ಮ ಹುಡುಗಿಯರನ್ನು ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು ಎಂದು ಕರೆ ನೀಡಿದರು. ಸನ್ಯಾಸಿಯಾಗಿ ಗಡ್ಡ ಬಿಡುತ್ತಿದ್ದರು. ನಾನು ತಿಳಿ ಹೇಳಿದ ಮೇಲೆ ತಲೆ ಬೋಳಿಸಿಕೊಂಡು ಪೇಟಾ ಸುತ್ತುತ್ತಿದ್ದಾರೆ. ರಾತ್ರಿ ಟೀ ಶರ್ಟ್, ಬರ್ಮೋಡ ಹಾಕೋದು, ಹೋಟೆಲ್, ಬಾರ್ಗೆ ಹೋಗೋದು ಅಂತವರಿಗೆ ಮಠ ಏಕೆ? ಮಠಗಳನ್ನು ಏಕೆ ಹಾಳು ಮಾಡ್ತಾ ಇದ್ದೀರಿ? ಇಂಥವರಿಗೆ ಸನ್ಯಾಸತ್ವ ಯಾಕೆ ಬೇಕು? ಹೀಗಿದ್ದರೆ ಮಠ ಬಿಟ್ಟು ಹೋಗಿ ಎಂದು ಸ್ವಾಮೀಜಿಗಳ ಕುರಿತು ಹರಿಹಾಯ್ದಿದ್ದಾರೆ.
ಶಿಕ್ಷಕರಿಗೆ ನಾಲೆಡ್ಜ್ ಇಲ್ಲ; ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಿವಾದಾತ್ಮಕ ಹೇಳಿಕೆ
ಇತ್ತೀಚೆಗೆ ಲಿಂಗಾಯತ ಮಠಾಧೀಶರ ಬಗ್ಗೆ ಕನ್ನೇರಿ ಶ್ರೀ ಟೀಕೆ ಮಾಡಿದ್ದಕ್ಕೆ ಲಿಂಗಾಯತ ಸಮಾಜದ ಪ್ರಮುಖರು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧ ವಿಧಿಸಿದ್ದರು.