ಬೆಳಗಾವಿ, ಜು.09: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಆರಂಭಿಸಿದ್ದೇನೆ. ಈ ಸಭೆಯಲ್ಲಿ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಭೀಕರ ಬರಗಾಲದ ಎಚ್ಚರಿಕೆ ರವಾನಿಸಿದ್ದು, ನಮ್ಮಲ್ಲೂ ವಾಡಿಕೆ ಮಳೆ ಆಗಿಲ್ಲ ಎಂದರು.
ಬರಗಾಲ ಪರಿಸ್ಥಿತಿಯಲ್ಲಿ ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇವೆ. ಸುಮಾರು 50ಕ್ಕೂ ಹೆಚ್ಚು ಶಾಸಕರು, ಸಂಸದರು ಅನೇಕ ಸಲಹೆ ನೀಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರ ಉಪಆಯುಕ್ತರಿಗೆ ಅನುದಾನ ನೀಡಿದೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ನಮ್ಮ ಸರ್ಕಾರ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಈ ತೀರ್ಮಾನ ಮಾಡಲಾಗಿದೆ. ಸ್ಥಳೀಯ ಶಾಸಕರು ಈ ಬಗ್ಗೆ ಅಧ್ಯಯನ ಮಾಡಿ ಯೋಜನೆ ರೂಪಿಸಬೇಕು. ಮುಂದಿನ ದಿನಗಳಲ್ಲಿ ನೀರಾವರಿಗೆ ನೀರು ಲಭ್ಯವಾಗುತ್ತದೆಯೋ ಇಲ್ಲವೋ, ಕುಡಿಯುವ ನೀರಿನ ಪೂರೈಕೆಗೆ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ರಸಗೊಬ್ಬರ ದಾಸ್ತಾನಿಗೆ ಅಧಿಕಾರಿಗಳಿಗೆ ಸೂಚನೆ
ರಸಗೊಬ್ಬರ ವಿಚಾರವಾಗಿ ಬೆಂಗಳೂರಿನಲ್ಲಿ ಸಭೆ ಮಾಡಲಾಗುವುದು. ಸಂಬಂಧಪಟ್ಟ ಸಚಿವರ ಜತೆ ಚರ್ಚೆ ಮಾಡುತ್ತೇನೆ. ಕೇಂದ್ರ ಸರ್ಕಾರ ಕೇವಲ 50% ಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರ ದಾಸ್ತಾನಿಗೆ ಸೂಚಿಸಲಾಗಿದೆ. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗುತ್ತಿದೆ ಎಂಬ ಅಹವಾಲು ಕೇಳಿಬಂದವು. 60ಕ್ಕೂ ಹೆಚ್ಚು ಜಾಗಗಳಲ್ಲಿ ಪೈಪ್ಲೈನ್ ಎಳೆಯಲು ಸಮಸ್ಯೆಯಾಗಿದೆ ಎಂದು ತಿಳಿದು ಬಂದಿದ್ದು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಗೆ ತೊಂದರೆ ನೀಡಬಾರದು ಎಂದು ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಅರಣ್ಯ ಹಕ್ಕು ವಿಚಾರವಾಗಿ ಯಾರನ್ನೂ ಒಕ್ಕಲೆಬ್ಬಿಸಬಾರದು. ಕಾನೂನು ಚೌಕಟ್ಟಿನಲ್ಲಿ, ಅವರಿಗೆ ಸಿಗಬೇಕಾದ ಹಕ್ಕು ನೀಡಬೇಕು. ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ವಾಸ ಮಾಡಿರುವವರನ್ನು ರಕ್ಷಣೆ ಮಾಡುವುದು ನಮ್ಮ ಸಂಕಲ್ಪ ಎಂದು ತಿಳಿಸಿದರು.
ರಾಜ್ಯದ ಮುಜರಾಯಿ ದೇವಾಲಯಗಳ ಹುಂಡಿ ರಕ್ಷಣೆಗೆ ಸಿಸಿಟಿವಿ
ರಾಮ ಮಂದಿರ ವಿಚಾರದಲ್ಲಿ ನಡೆದಿರುವ ಅಕ್ರಮ ಭಕ್ತರಿಗೆ ಅಗೌರವ ತಂದಿದೆ. ಜನರು ಭಕ್ತಿಯಿಂದ ದೇಣಿಗೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಲೂಟಿ ಮಾಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಕಡ್ಡಾಯವಾಗಿ ಹುಂಡಿಯ ಮುಂದೆ ಸಿಸಿಟಿವಿ ಅಳವಡಿಕೆಗೆ ತೀರ್ಮಾನಿಸಿದೆ. ಹುಂಡಿ, ಹಣ ತೆಗೆಯುವ ಹಾಗೂ ಅದನ್ನು ಎಣಿಸುವ ಜಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಎಸ್ಪಿ ಕಚೇರಿಗೆ, ಉಪ ಆಯುಕ್ತರ ಕಚೇರಿಗೆ ರವಾನೆಯಾಗುವ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು.
ಎಸ್ಐಆರ್ ವಿಚಾರವಾಗಿ ಮಾರ್ಗದರ್ಶನ ನೀಡಲಾಗಿದೆ. ಮತದಾನದ ಹಕ್ಕು, ಬದುಕಿನ ಹಕ್ಕು. ಇದನ್ನು ಉಳಿಸಿಕೊಳ್ಳಲು ಅಗತ್ಯ ಇರುವವರಿಗೆ 10 ವರ್ಷ ವಾಸ ಇರುವವರಿಗೆ ನಿವಾಸ ದೃಢೀಕರಣ ಪತ್ರ ನೀಡಲಾಗುವುದು. 4.50 ಕೋಟಿ ಜಾತಿ ಪ್ರಮಾಣ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರತಿ ಬೂತ್ನಲ್ಲಿ ಸಹಾಯ ಕೇಂದ್ರ ತೆರೆಯಲಾಗುವುದು. ಎಲ್ಲರ ಮತದಾನದ ಹಕ್ಕು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ನಿಲ್ಲಲ್ಲ, ಅಕ್ರಮ ತಡೆಯಲು ಪರಿಶೀಲನೆ
ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆ ದುರ್ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮಾಡುತ್ತಿದ್ದೇವೆ. ಸತ್ತವರ ಹೆಸರಿನಲ್ಲಿ ನೂರಾರು ಕೋಟಿ ಹಣ ಪಡೆದಿದ್ದಾರೆ. ಇದನ್ನು ತಡೆಯಲು, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಮರುಸಂಗ್ರಹ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ತೀರ್ಮಾನ ಮಾಡಿದ ಯಾವುದೇ ಕಾರ್ಯಕ್ರಮ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರೈತರ ಕೃಷಿ ವಿಮೆ ವಿಚಾರದಲ್ಲಿ ಮೋಸ ನಡೆಯುತ್ತಿದೆ ಎಂದು ಶಾಸಕರು ನಮ್ಮ ಗಮನ ಸೆಳೆದಿದ್ದಾರೆ. ಕಲಬುರ್ಗಿಯಲ್ಲಿ ನಮಗೆ ಮಾಹಿತಿ ಬಂದಿದೆ. ರೈತರಿಗೆ ಹಣ ಸಿಗುತ್ತಿದೆಯೇ ಅಥವಾ ಮಧ್ಯವರ್ತಿಗಳ ಹಾವಳಿ ಇದೆಯೇ ಎಂದು ಪರಿಶೀಲನೆ ಮಾಡಲು ಬೆಂಗಳೂರಿನಲ್ಲಿ ಸಭೆ ಮಾಡುತ್ತೇವೆ ಎಂದು ಹೇಳಿದರು.
ಮೋಡ ಬಿತ್ತನೆ ವಿಚಾರವನ್ನು 10ಕ್ಕೂ ಹೆಚ್ಚು ಶಾಸಕರು ಪ್ರಸ್ತಾಪಿಸಿದ್ದು, ಇತ್ತೀಚೆಗೆ ಕೆಲವು ಶಾಸಕರು ತಾವೇ ಹಣ ಹಾಕಿ ಈ ಪ್ರಯೋಗ ಮಾಡಿದ್ದು, ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವರದಿ ತರಿಸಿಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಂದಾಯ ಇಲಾಖೆಯಿಂದ ಭೂ ದಾಖಲೆ ನೀಡುವ ಯೋಜನೆ ಮಾಡಲಾಗಿದ್ದು, ಇದು ನಮ್ಮ ಸರ್ಕಾರದ ಪ್ರಿಯವಾದ ಯೋಜನೆ. ಇಡೀ ದೇಶದಲ್ಲಿ ಎಲ್ಲರ ಆಸ್ತಿ ದಾಖಲೆಗಳನ್ನು ಸರಿಪಡಿಸಿ ಕೊಡುವ ಭೂಮಿ ಗ್ಯಾರಂಟಿಯನ್ನು ನೀಡಲು ಮುಂದಾಗಿದೆ. ಇ ಖಾತಾ ನೀಡಲು ಸರ್ಕಾರ ತೀರ್ಮಾನಿಸಿದೆ. ಇನ್ನು ಒಸಿ ಸಿಸಿ ವಿಚಾರದಲ್ಲಿ 40x60 ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಅರ್ಜಿ ಹಾಕುವ ದಿನಾಂಕ ಆಗಸ್ಟ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದರು.
ತುಂಗಭದ್ರಾ ವಿಚಾರವಾಗಿ ಐತಿಹಾಸಿಕ ತೀರ್ಮಾನ
ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲಾ 33 ಗೇಟ್ ಬದಲಾವಣೆ ಮಾಡಿದ್ದೇವೆ. ಟಿಬಿ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸಿಎಂಗಳು ಮೊದಲ ಬಾರಿಗೆ ಸಭೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಟಡದೇ ರೈತರ ಬದುಕು ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.
CM DK Shivakumar: ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್
ಈ ಮಧ್ಯೆ ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ತೀರ್ಮಾನಿಸಲಾಗಿದ್ದು, ಕೇಂದ್ರಕ್ಕೆ ನಮ್ಮ ಸಮ್ಮತಿ ಸೂಚಿಸಿದ್ದೇವೆ. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಿ, 1 ಲಕ್ಷ ಕೋಟಿ ಯೋಜನೆ ಮಾಡಲಿದೆ. ಇದರಲ್ಲಿ 10% ರಾಜ್ಯ ಸರ್ಕಾರದ್ದಾಗಿದ್ದು, 90% ಕೇಂದ್ರ ಸರ್ಕಾರ ಭರಿಸಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.