ಬೆಳಗಾವಿ: ಕುಡಿಯುವ ನೀರಿನ ಸಂಪರ್ಕವನ್ನು ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸಿರುವ ಕ್ರಮ ಖಂಡಿಸಿ ದಯಾಮರಣ ಕೋರಿದ ಘಟನೆ ಚನ್ನಮ್ಮನ ಕಿತ್ತೂರಿನಲ್ಲಿ ನಡೆದಿದೆ.
ಪಟ್ಟಣದ ಮಂಜುನಾಥ ರುದ್ರಪ್ಪ ಸವದಿ ಹಾಗೂ ಶೃತಿ ಮಂಜುನಾಥ ಸವದಿ ಅವರ ಕುಟುಂಬಕ್ಕೆ ಪಟ್ಟಣ ಪಂಚಾಯತಿಯಿಂದ ಇದ್ದ ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಕ್ರಮ ಜರುಗಿಸಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.
ಇದನ್ನೂ ಓದಿ: Mohan Vishwa Column: ದಶಕದಲ್ಲಿ ಬದಲಾದ ಭಾರತೀಯ ರೈಲ್ವೆ
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ದಂಪತಿ ದೂರಿದ್ದಾರೆ. ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯ ಕಳೆದುಕೊಂಡ ಪರಿಣಾಮ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮಾನಸಿಕ ಹಾಗೂ ಆರ್ಥಿಕ ಒತ್ತಡ ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ.
ತಮಗೆ ಆಗುತ್ತಿರುವ ಅನ್ಯಾಯವನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಪುನಃ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಜು. 6ರಿಂದ ಕಿತ್ತೂರು ಪಟ್ಟಣ ಪಂಚಾಯತಿ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ದಯಾ ಮರಣ ಕೋರಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.