ಬೆಳಗಾವಿ: ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮ ಜೋರಾಗಿದೆ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಜನರು ಕನ್ನಡ ರಾಜ್ಯೋತ್ಸವನ್ನು ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಷ್ಟೊತ್ತಿಗೆ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತದತ್ತ ಧಾವಿಸಿದ ಸಾವಿರಾರು ಕನ್ನಡಿಗರು ರಾಜ್ಯೋತ್ಸವ ಆಚರಣೆಗೆ ಮುಂದಾದರು. ಇಡೀ ಚೆನ್ನಮ್ಮ ವೃತ್ತವನ್ನು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು. ಪಟಾಕಿಗಳನ್ನು ಸಿಡಿಸಿ ಕನ್ನಡ ಪರ ಘೋಷಣೆಯನ್ನು ಜನರು ಕೂಗಿದ್ದಾರೆ.
ಇದೇ ಮೊದಲ ಬಾರಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿ ಮದ್ದಿನ ಪ್ರದರ್ಶನ ಹಮ್ಮಿಕೊಂಡಿದ್ದರು. ಸರಿಯಾಗಿ ರಾತ್ರಿ 12 ಗಂಟೆ ಆಗುತ್ತಿದ್ದಂತೆ ಪ್ರದರ್ಶನ ಪ್ರಾರಂಭವಾಯಿತು. ಚೆನ್ನಮ್ಮ ವೃತ್ತದ ಬಳಿ 10 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು. ಕರ್ನಾಟಕ ರಾಜ್ಯೋತ್ಸವಕ್ಕೆ ಜಯವಾಗಲಿ, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಜಯವಾಗಲಿ, ಯಾರಪ್ಪಂದ ಏನೈತಿ - ಬೆಳಗಾವಿ ನಮ್ಮದೈತಿ, ಪ್ರಾಣ ಕೊಟ್ಟೇವು - ಬೆಳಗಾವಿ ಬಿಡೆವು ಸೇರಿ ಮುಂತಾದ ಘೋಷಣೆಗಳು ಇಡೀ ನಗರದಲ್ಲಿ ಮೊಳಗಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ದೊಡ್ಡ ಕ್ರಾಂತಿ ಆಗುವುದು ನಿಶ್ಚಿತ. ಏನಾದರೂ ಅನಾಹುತ ಉಂಟಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Namma Metro: ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಹಳದಿ ಮಾರ್ಗದಲ್ಲಿ ಇನ್ಮುಂದೆ ಪ್ರತಿ 15 ನಿಮಿಷಕ್ಕೊಂದು ರೈಲು
ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಂಪು
ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿಥಿಗಳು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.