ಬೆಳಗಾವಿ, ಏ.22: ಹಿಟ್ ಸ್ಟ್ರೋಕ್ಗೆ (Heat Stroke) ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ (Belagavi) ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ.
ಅವರು ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತು ಆಪ್ತರು ಮಾಹಿತಿ ನೀಡಿದ್ದು, ವೆಂಕಟೇಶ ಅವರು ಬಿಸಿಲಿನ ತಾಪ ತಾಳಲಾರದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಚಾಲಕನ ಕಾಲು ಕಟ್
ಬೆಂಗಳೂರು: ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲುಗಳು ಕಟ್ ಆಗಿರುವ ಘಟನೆ ನೆಲಮಂಗಲ (Nelamangala) ಬಳಿಯ ಅರಿಶಿನಕುಂಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಿದ್ರೆಯ ಮಂಪರಿನಲ್ಲಿ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumakuru-Bengaluru National Highway) ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಎರಡೂ ಲಾರಿಗಳನ್ನು ತೆರವು ಮಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.