ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಭೀಕರ ಅಪಘಾತ (Belagavi) ಸಂಭವಿಸಿದೆ. ಗೂಡ್ಸ್ ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ (Road Accident) ಮಗು ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗುವಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್ನಲ್ಲಿ ರಾಯಬಾಗ ಪಟ್ಟಣಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್ಗೆ ನೇರವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರುವ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.
Koppal Tractor accident: ಕೊಪ್ಪಳದಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿಯಾಗಿ 7 ಮಂದಿ ದುರ್ಮರಣ!
ಪ್ರತ್ಯೇಕ ಘಟನೆಯಲ್ಲಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಭಯಾನಕ ಅಪಘಾತ ಸಂಭವಿಸಿದ್ದು, ಎಸ್ಯುವಿ ಕಾರೊಂದು ಒಂದು ಸಾವಿರ ಅಡಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಎಂಟು ಪ್ರವಾಸಿಗರು ಮೃತಪಟ್ಟಿದ್ದಾರೆ. ಪಶ್ಚಿಮ ಘಟ್ಟದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಅಂಬೆನಾಲಿ ಘಾಟ್ ಬಳಿಯ ಮಹಾಬಲೇಶ್ವರ-ಪೋಲಾದ್ಪುರ ರಸ್ತೆಯಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಮೃತ ಯುವಕರು ಸತಾರಾ ಜಿಲ್ಲೆಯ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ದಪೋಲಿಯಿಂದ ಸತಾರಾಕ್ಕೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.